ಸಾಗರ: ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಪ್ಪ ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ತೆರೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ 8ನೇ ದಿನವೂ ಮುಂದುವರಿದಿದೆ.
ಗ್ರಾಮದಲ್ಲಿ ಆರಂಭವಾಗಿರುವ ಮದ್ಯ ಮಾರಾಟ ಮಳಿಗೆ ಮುಚ್ಚುವವರೆಗೂ ಶಾಲೆಗೆ ಹೋಗುವುದಿಲ್ಲ ಎಂದು ಗ್ರಾಮದ ವಿದ್ಯಾರ್ಥಿನಿಯರು ನಿರ್ಧರಿಸಿದ್ದಾರೆ. ಇದರಿಂದಾಗಿ ಕಳೆದ ಆರು ದಿನಗಳಿಂದ ಗ್ರಾಮದ ವಿದ್ಯಾರ್ಥಿನಿಯರು ಶಾಲೆಗಳ ತರಗತಿಗಳಿಗೆ ಹಾಜರಾಗಿಲ್ಲ.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಹಾಗೂ ಅಬಕಾರಿ ಇಲಾಖೆ ಹಿರಿಯ ಅಧಿಕಾರಿಗಳು, ‘ಮದ್ಯದಂಗಡಿ ಮುಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಗ್ರಾಮದ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳುಹಿಸಿ’ ಎಂದು ಮನವಿ ಮಾಡಿದ್ದಾರೆ.
ಆದರೆ ಗ್ರಾಮಸ್ಥರು ಮದ್ಯದಂಗಡಿ ಮುಚ್ಚುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ತಾಲ್ಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್ ಇ. ಕೆಳದಿ, ಕರ್ನಾಟಕ ರಾಜ್ಯ ರೈತ ಸಂಘದ ಗಿರೀಶ್ ಶಿರವಾಳ, ಹೊಯ್ಸಳ ಗಣಪತಿಯಪ್ಪ, ಗ್ರಾಮ ಸುಧಾರಣಾ ಸಮಿತಿ ಅಧ್ಯಕ್ಷ ಸುರೇಶ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.