ಶಿವಮೊಗ್ಗ: ಜಿಲ್ಲೆಯಲ್ಲಿ ಭೂಮಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿ, ತಿರಸ್ಕೃತಗೊಂಡ ಎಲ್ಲ ಅರ್ಜಿದಾರರಿಗೂ ಹಕ್ಕುಪತ್ರ ನೀಡಬೇಕು. ಪೋಡಿ-ದುರಸ್ತಿ ಹಾಗೂ ಚೆಕ್ಕುಬಂದಿ ಮಾಡಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ ಆಗ್ರಹಿಸಿದರು.
ನಮೂನೆ 50, 53 ಹಾಗೂ 57ರ ಅಡಿಯಲ್ಲಿ ಜಿಲ್ಲೆಯಲ್ಲಿ ಭೂಮಿ ಹಕ್ಕುಪತ್ರಕ್ಕಾಗಿ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ 2,14,962 ಅರ್ಜಿಗಳು ತಿರಸ್ಕೃತಗೊಂಡಿವೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕನಿಷ್ಠ 5 ಎಕರೆ ಒಳಗಿನ ಬಡವರಿಗೆ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿದರು.
ಜಿಲ್ಲೆಯ ಕಂದಾಯ ಭೂಮಿಯಲ್ಲಿ ಬಗರ್ ಹುಕುಂ ಸಾಗುವಳಿ ಮಾಡಿದ ಸಾವಿರಾರು ಸಾಗುವಳಿದಾರರಿಗೆ 1979-–80ರಲ್ಲಿ ಹಕ್ಕುಪತ್ರ ನೀಡಲಾಗಿತ್ತು. ಆದರೆ, ಇಲ್ಲಿಯವರೆಗೂ ಪೋಡಿ-ದುರಸ್ತಿ ಮಾಡಿಕೊಟ್ಟಿಲ್ಲ. ಈಗ ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ ಎಂದು ದೂರಿದರು.
ಅರಣ್ಯ ಹಕ್ಕು ಅಧಿನಿಯಮ -2005ರ ಅಡಿ ಅರಣ್ಯವಾಸಿಗಳಾದ ಆದಿವಾಸಿ, ಬುಡಕಟ್ಟು ಜನಾಂಗದವರು ಜಮೀನು ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. 32,364 ಅರ್ಜಿಗಳನ್ನು ತ್ವರಿತವಾಗಿ ಸಕ್ರಮಗೊಳಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಜನರ 18,387 ಅರ್ಜಿಗಳನ್ನು ಸಕ್ರಮ ಮಾಡಬೇಕು. ಮನೆ ಹಕ್ಕುಪತ್ರ ಕೊಡಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.