ಶಿವಮೊಗ್ಗ: ಬಿಜೆಪಿ ಪರ ಇರುವ ಬಾಡಿಗೆ ಭಾಷಣಕಾರರು ಕಾಂಗ್ರೆಸ್ ನಾಯಕರ ವಿರುದ್ಧ ನಾಲಿಗೆ ಹರಿಬಿಡುತ್ತಿದದು, ಇದನ್ನು ನಿಲ್ಲಿಸಬೇಕು ಎಂದು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ ಹೇಳಿದರು.
‘ಪುನೀತ್ ಕೆರೆಹಳ್ಳಿಯ ಗುರು ಚಕ್ರವರ್ತಿ ಸೂಲಿಬೆಲೆ. ಇವರು ಕೂಡ ಕಾಂಗ್ರೆಸ್ ನಾಯಕರನ್ನು ಮನಸ್ಸಿಗೆ ಬಂದಂತೆ ಟೀಕಿಸುತ್ತಿದ್ದಾರೆ. ಸಮಾಜವನ್ನು ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
‘ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರನ್ನು ಟೀಕಿಸಿದ್ದಾನೆ. ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರೂ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಹಗುರವಾಗಿ ಮಾತನಾಡುತ್ತಾರೆ. ಕೆಲವರಿಗೆ ಕೆಟ್ಟ ಮೇಲೆ ಬುದ್ಧಿ ಬರುತ್ತದೆ. ಆದರೆ, ಈಶ್ವರಪ್ಪ ಅವರಿಗೆ ಕೆಟ್ಟ ಮೇಲೂ ಬುದ್ಧಿ ಬರುವುದಿಲ್ಲ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್. ರಾಜಶೇಖರ್, ಮೊಹಮ್ಮದ್ ನೂಮಾನ್, ಅಬ್ದುಲ್ ವಾಹಲ್, ಸುಹೇಲ್ ಅಹಮ್ಮದ್, ಮುಜಾಮಿಲ್ ಪಾಷಾ, ಅಕ್ರಂ ಷರೀಫ್ ಇದ್ದರು.