ಶಿವಮೊಗ್ಗ: ಪಿಎಫ್ಐ, ಎಸ್ಡಿಪಿಐ ಅಂತಹ ಸಂಘಟನೆಗಳನ್ನು ನಿಷೇಧಿಸ ಬೇಕು ಎಂದು ಆಗ್ರಹಿಸಿ ಹಿಂದೂ ಜನ ಜಾಗೃತಿ ಸಮಿತಿ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
‘ಹಿಂದೂಗಳ ವಿರುದ್ಧ ಜಿಹಾದಿ ಚಟುವಟಿಕೆ ಹೆಚ್ಚುತ್ತಿವೆ. ಈ ಚಟುವಟಿಕೆಗಳಿಗೆ ವಿದೇಶದಿಂದ ಕೂಡ ಹಣ ಬರುತ್ತಿದೆ. ಹಲವರು ಈ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಇವರ ಅಟ್ಟಹಾಸ ಮಿತಿಮೀರಿದೆ. ರಾಷ್ಟ್ರಾದ್ಯಂತ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ಇಂತಹ ಸಂಘಟನೆಗಳನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿದರು.
ತೆಲಂಗಾಣ ಶಾಸಕ ಟಿ.ರಾಜಾಸಿಂಹ ಅವರಿಗೆ ಕೊಲೆ ಬೆದರಿಕೆಯನ್ನು ಒಡ್ಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ. ಈ ಘಟನೆಯಲ್ಲಿ ತೆಲಂಗಾಣ ಸರ್ಕಾರದಿಂದ ನ್ಯಾಯ ಸಿಗುವ ಸಾಧ್ಯತೆ ಕಡಿಮೆ ಇದೆ. ಅವರ ಪ್ರಕರಣವನ್ನು ಕರ್ನಾಟಕ ಅಥವಾ ನೆರೆಯ ರಾಜ್ಯಗಳಿಗೆ ಹಸ್ತಾಂತರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿರುವ ಇಂತಹ ಮುಸ್ಲಿಂ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಲ್ಲದೇ, ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಹಿಂದೂಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಅಂತರರಾಷ್ಟ್ರೀಯ ಮಟ್ಟದ ಕೈವಾಡ ವಿದೆಯೇ ಎಂಬ ಬಗ್ಗೆ ತನಿಖೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕ ವಿಜಯ ರೇವಣಕರ್, ಪ್ರಮುಖರಾದ ವಿಶ್ವನಾಥ್, ಶ್ರೀಪಾದ, ಮಹೇಶ್, ಗಂಗಾಧರ, ಲಲಿತಾ, ಸುನೀತಾ, ಸೌಮ್ಯಾ, ರಘು, ನಂದೀಶ್ ಇದ್ದರು.