ಶಿವಮೊಗ್ಗ: ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮಳೆ, ನೆರೆಯಿಂದ ಮನೆ ಕಳೆದುಕೊಂಡವರಿಗೆ ಎರಡು ವರ್ಷಗಳಾದರೂ ಪರಿಹಾರ ನೀಡಿಲ್ಲ. ಬಡವರ ಜೀವನದ ಜತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಶಿವಮೊಗ್ಗ ನಗರದಲ್ಲಿ ಮಳೆಗೆ ಸಾವಿರಾರು ಮನೆಗಳು ಕುಸಿದಿವೆ, ಬಡವರು ಬೀದಿಪಾಲಾಗಿದ್ದಾರೆ. ಸರ್ಕಾರ ₹ 5 ಲಕ್ಷ ಪರಿಹಾರ ಘೋಷಿಸಿತ್ತು. ಆದರೆ, ಈ ಘೋಷಣೆ ಕಣ್ಣೊರೆಸುವ ತಂತ್ರವಾಗಿದೆ. ಅರ್ಜಿಗಳು ಕಸದಬುಟ್ಟಿ ಸೇರಿವೆ. ಅರ್ಜಿಗಳೇ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ದೂರಿದರು.
ಶಿವಮೊಗ್ಗ ತಾಲ್ಲೂಕಿನಲ್ಲಿ 200 ಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. 2017 -18ರಿಂದ ಯಾವ ಗ್ರಾಮಗಳಲ್ಲೂ ಒಂದು ಮನೆ ಸಹ ನೀಡಿಲ್ಲ. ಮನೆ ಕಟ್ಟಲು ಸಹಾಯ ಮಾಡಿಲ್ಲ. ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದ ಕೆಲವರಿಗೆ ಸರ್ಕಾರ ಮನೆಗಳನ್ನು ನಿರ್ಮಿಸಿಕೊಟ್ಟಿತ್ತು. ಅವು ಅತ್ಯಂತ ಕಳಪೆಯಾಗಿವೆ. ಮಳೆ ಬಂದರೆ ಒಳಗೆ ನೀರು ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.