ಶಿವಮೊಗ್ಗ: ರಾಜ್ಯದ ಹಿತಾಸಕ್ತಿ ಬಲಿಕೊಟ್ಟು ನದಿ ಜೋಡಣೆ ಯೋಜನೆ ಒಪ್ಪಿಕೊಳ್ಳುವುದು ಅಸಾಧ್ಯ. ಈಗಾಗಲೇ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಕ್ಕೆ ಎಷ್ಟು ನೀರು ಸಿಗುತ್ತದೆ ಎನ್ನುವುದನ್ನು ನೋಡಿಕೊಂಡೇ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ನದಿ ಜೋಡಣೆಯಿಂದ ರಾಜ್ಯಕ್ಕೆ ಆಗುವ ಉಪಯೋಗ ಕುರಿತು ಇನ್ನಷ್ಟು ಚರ್ಚೆಗಳು ನಡೆಯಬೇಕು. ರಾಜ್ಯಕ್ಕೆ ಅನ್ಯಾಯವಾಗಲು ಎಂದಿಗೂ ಬಿಡುವುದಿಲ್ಲ. ನದಿ ಜೋಡಣೆಯಿಂದ 9 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ. ಒಣ ಬೇಸಾಯ ಮಾಡುವವರಿಗೆ ಅನುಕೂಲವಾಗಲಿದೆ. ಕುಡಿಯುವ ನೀರಿನ ಕೊರತೆ ನೀಗಲಿದೆ. ಇಂತಹ ರೈತ ಪರ ಯೋಜನೆಯ ಲಾಭ ರಾಜ್ಯಕ್ಕೂ ಸಿಗಬೇಕು. ಪರಿಸರವಾದಿಗಳು ಸಹಕರಿಸಬೇಕು ಎಂದರು.
ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಚ್.ಕೆ. ಪಾಟೀಲ್, ಸಿದ್ಧರಾಮಯ್ಯ ಮೊದಲಾದವರು ನೀರಿನ ವಿಚಾದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಸಂಪುಟ ವಿಸ್ತರಣೆ ಕುರಿತು ಸ್ವತಃ ಮುಖ್ಯಮಂತ್ರಿ ಅವರಿಗೆ ಖಚಿತ ಮಾಹಿತಿ ಇಲ್ಲ. ಹಾಗೇನಾದರೂ ವಿಸ್ತರಣೆಯಾದರೆ ಮೊದಲು ಮಾದ್ಯಮಗಳಿಗೇ ತಿಳಿಯುತ್ತದೆ ಅಲ್ಲವೇ ಎಂದು ಪ್ರಶ್ನಿಸಿದರು.