ಶಿವಮೊಗ್ಗ: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಹಾಗೆಯೇ, ಒಬಿಸಿ ಪಟ್ಟಿಯಲ್ಲಿ ಸ್ಥಾನ ದೊರಕಿಸಲು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ಆಗ್ರಹಿಸಿದರು.
ವೀರಶೈವ-ಲಿಂಗಾಯತ ಒಂದು ವಿಶಿಷ್ಟ ಧರ್ಮ. ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚು ವೀರಶೈವ-ಲಿಂಗಾಯತರು ಇದ್ದಾರೆ. 86 ಉಪ ಪಂಗಡಗಳಿವೆ. ಕೃಷಿ ಆಧಾರಿತ ಕಸುಬುಗಳನ್ನು ಅವಲಂಬಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿದ್ದಾರೆ. ಹಾಗಾಗಿ, ಹಿಂದುಳಿದ ವರ್ಗಗಳ ಪಟ್ಟಿಗೆ (ಒಬಿಸಿ) ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗದಲ್ಲಿ ಮೀಸಲಾತಿ ದೊರೆತಿಲ್ಲ. ದೇಶದ ಇತರೆ ರಾಜ್ಯಗಳಲ್ಲಿ ವೀರಶೈವ ಲಿಂಗಾಯತರನ್ನು ಹಿಂದುಳಿದ ವರ್ಗಕ್ಕೆ ಸೇರಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ಹಿಂದುಳಿದ ವರ್ಗದ ಪಟ್ಟಿಯಲ್ಲಿ ಸ್ಥಾನ ನೀಡಿಲ್ಲ. ಇದರಿಂದ ಸಮಾಜದ ಜನರಿಗೆ ಅನ್ಯಾಯವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಎಂ.ಪಿ.ಆನಂದಮೂರ್ತಿ, ಸಿ.ಮಹೇಶ್ ಮೂರ್ತಿ, ಪಿ.ಎಂ.ರುದ್ರಮುನಿ, ನಂಜಪ್ಪ, ಚಂದ್ರು, ಬಸವನಗೌಡ, ಫಾಲಾಕ್ಷಪ್ಪ ಇದ್ದರು.