ಶಿಕಾರಿಪುರ: ವೈಜ್ಞಾನಿಕ ರೀತಿಯಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಕ ಘಟಕವನ್ನು ಪಟ್ಟಣದಲ್ಲಿ ಆರಂಭಿಸಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿಯೇ ಮಾದರಿ ಕಸವಿಲೇವಾರಿ ಘಟಕ ಮಾಡುವ ಸಂಬಂಧ ಅಗತ್ಯ ಯೋಜನೆ ರೂಪಿಸಲಾಗಿದೆ ಎಂದು ಪ್ರಭಾರ ಮುಖ್ಯಾಧಿಕಾರಿ ರಾಜ್ಕುಮಾರ್ಹೇಳಿದರು.
ಪಟ್ಟಣದ ಹೊನ್ನಾಳಿ ರಸ್ತೆಯಲ್ಲಿರುವ ಪುರಸಭೆ ಘನತ್ಯಾಜ ವಸ್ತು ವಿಲೇವಾರಿ ಘಟಕದಲ್ಲಿ ಹಸಿರು ನ್ಯಾಯಾಲಯ ನಿರ್ದೇಶನದಂತೆ ಪುರಸಭೆಯಿಂದ ಮಂಗಳವಾರ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಮಾರ್ಗದರ್ಶನದಂತೆ ಕೆಲವೇ ದಿನಗಳಲ್ಲಿ ಆಧುನಿಕ ಯಂತ್ರೋಪಕರಣಗಳ ಮೂಲಕಕಾಂಪೋಸ್ಟ್ ಗೊಬ್ಬರ ತಯಾರಿಕ ಘಟಕ ಆರಂಭಿಸಲಾಗುವುದು ಎಂದರು.
ಕಾರ್ಯಕ್ರಮಕ್ಕೆಚಾಲನೆ ನೀಡಿದ ಜಿಲ್ಲಾಧಿಕಾರಿ ಕಚೇರಿ ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ, ‘ಪರಿಸರದ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ.ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಾಗೃತಿ ಸಾರ್ವಜನಿಕರಲ್ಲಿ ಮೂಡಬೇಕು. ಪುರಸಭೆ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪುರಸಭಾ ವಾಹನಗಳಿಗೆ ನೀಡುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾರ್ವಜನಿಕರು ತಮ್ಮ ಮನೆಗಳಲ್ಲಿ ಪೈಪು ಕಾಂಪೋಸ್ಟ್ ಹಾಗೂ ಇತರೆ ಕಾಂಪೋಸ್ಟ್ ಮಾದರಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಕಸ ನೀಡುವ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಬೇಕು ಹಾಗೂ ಪ್ಲಾಸ್ಟಿಕ್ ಬಳಸಬಾರದು’ ಎಂದು ಮನವಿ ಮಾಡಿದರು.
ತಹಶೀಲ್ದಾರ್ ಎಂ.ಪಿ. ಕವಿರಾಜ್, ಪುರಸಭೆ ಸದಸ್ಯರಾದ ಭದ್ರಾಪುರ ಫಾಲಾಕ್ಷ, ಸುರೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಾದ ಮಂಜುನಾಥ್, ಲಿಂಗರಾಜ್, ಮೋಹನ್ ಕುಮಾರ್, ಪರೋಪಕಾರಂ ತಂಡದ ಸದಸ್ಯರಾದ ಮಧುಕೇಶ್ವರ, ಕೆ.ಎಸ್. ಹುಚ್ಚರಾಯಪ್ಪ, ಜಿ.ಕೆ. ಹೆಬ್ಬಾರ್ ಇದ್ದರು.