ಸಾಗರ: ಶರಾವತಿ ಜಲ ವಿದ್ಯುತ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ಹಲವು ಸಂತ್ರಸ್ತರಿಗೆ ಈವರೆಗೂ ಭೂಮಿಯ ಹಕ್ಕುಪತ್ರ ಸಿಕ್ಕಿಲ್ಲ. ಕೂಡಲೇ ಅವರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ತಾಲ್ಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್ ಇ.ಕೆಳದಿ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿರೇಭಾಸ್ಕರ, ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣ ಸಂದರ್ಭದಲ್ಲಿ ಜಮೀನು ಕಳೆದುಕೊಂಡವರನ್ನು ಜಿಲ್ಲೆಯ ವಿವಿಧ ಭಾಗಗಳಿಗೆ ಸ್ಥಳಾಂತರಿಸಲಾಯಿತು. ಸರ್ಕಾರ ಸೂಚಿಸಿದ ಪ್ರದೇಶಕ್ಕೆ ತೆರಳಿ ಅವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಹಲವು ದಶಕಗಳು ಕಳೆದರೂ ಅವರಿಗೆ ಭೂಮಿಯ ಹಕ್ಕು ದೊರಕದೆ ಇರುವುದು ಬೇಸರದ ಸಂಗತಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅನೇಕ ಸಂತ್ರಸ್ತರು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಅರಣ್ಯ ಇಲಾಖೆ ಈಗ ತನಗೆ ಸೇರಿದ ಭೂಮಿ ಎಂದು ಪ್ರತಿಪಾದಿಸುತ್ತಿದೆ. ಹೀಗಾಗಿ ಹಲವರು ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಸರ್ಕಾರ ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ನಾರಾಯಣಪ್ಪ, ಗೋಪಾಲ, ಅಶೋಕ್, ಸುರೇಶ್ ಕೆಳದಿ, ಮಹಾಬಲೇಶ್, ಶಿವಪ್ಪ, ಈಶ್ವರಪ್ಪ ಇದ್ದರು.