ಶಿರಾಳಕೊಪ್ಪ: ‘ಪುರಸಭೆ ವ್ಯಾಪ್ತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹೊರತುಪಡಿಸಿ ಪರ್ಯಾಯ ರಾಜಕೀಯ ಶಕ್ತಿಯನ್ನು ಒಂದುಗೂಡಿಸುವ ಉದ್ದೇಶದಿಂದ ನಾನು ಹಾಗೂ ಪತ್ನಿ ಮಂಜುಳಾ ರಾಜು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇವೆ’ ಎಂದು ಪುರಸಭೆ ಸದಸ್ಯ ಟಿ. ರಾಜು ತಿಳಿಸಿದರು.
‘ಕಳೆದ ಪುರಸಭೆ ಚುನಾವಣೆಯಲ್ಲಿ ನಾನು ಹಾಗೂ ಪತ್ನಿ ಮಂಜುಳಾ ಸೇರಿದಂತೆ ನಾಲ್ಕು ಜನ ಪಕ್ಷೇತರ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದೇವೆ. ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಬಿಜೆಪಿ ಬಿಡುತ್ತಿರುವ ಬಗ್ಗೆ ಯಾರನ್ನೂ ದೂಷಿಸುವುದಿಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಬಿ.ವೈ ರಾಘವೇಂದ್ರ ಹಾಗೂ ಯಡಿಯೂರಪ್ಪನವರು ಕೊಟ್ಟ ಮಾತಿನಂತೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ನಮ್ಮನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಆ ಕೃತಜ್ಞತೆಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ಹಲವಾರು ಮುಖಂಡರು ತಮ್ಮನ್ನು ಸಂಪರ್ಕಿಸಿದರೂ ಪ್ರಾಮಾಣಿಕವಾಗಿ ರಾಘವೇಂದ್ರ ಅವರ ಗೆಲುವಿಗೆ ಶ್ರಮಪಟ್ಟಿದ್ದು ಅವರ ಗೆಲುವು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ನಾನು ಎಲ್ಲಾ ಜಾತಿ ಧರ್ಮಗಳನ್ನು ಒಂದುಗೂಡಿಸಿಕೊಂಡು ಚುನಾವಣೆ ಮಾಡುವ ದೃಷ್ಟಿಯನ್ನು ಹೊಂದಿದ್ದು, ಹಾಗಾಗಿ, ಬಿಜೆಪಿ, ಕಾಂಗ್ರೆಸ್ ಹೊರತುಪಡಿಸಿ ಸಮಾನ ಮನಸ್ಕರ ತಂಡವನ್ನು ಕಟ್ಟಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ’ ಎಂದರು.