ವಿಐಎಸ್ಎಲ್ ಕಾರ್ಮಿಕರ ಹೋರಾಟಕ್ಕೆ ಬೆಂಬಲ

ಭದ್ರಾವತಿ: ‘ಇಲ್ಲಿನ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್ಎಲ್) ಉಳಿಸಿಕೊಳ್ಳಬೇಕು ಎಂಬ ದೃಢ ನಿರ್ಧಾರದೊಂದಿಗೆ ಹೋರಾಟ ನಡೆಸುತ್ತಿರುವ ಕಾರ್ಮಿಕರಿಗೆ ನಮ್ಮ ಬೆಂಬಲ ಇದೆ’ ಎಂದು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಹೇಳಿದರು.
ಇಲ್ಲಿನ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಎದುರು ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಭಾನುವಾರ 11ನೇ ದಿನ ಪೂರೈಸಿದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಪತ್ರಕರ್ತರ ಸಂಘದಿಂದ ಬೆಂಬಲ ಸೂಚಿಸಿ ಮಾತನಾಡಿದರು.
‘ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕು ಮತ್ತು ಗುತ್ತಿಗೆ ಕಾರ್ಮಿಕರ ಹಿತ ಕಾಪಾಡಬೇಕು ಎಂಬ ಬೇಡಿಕೆಗಳು ಪ್ರಮುಖವಾಗಿವೆ. ಈ ನಿಟ್ಟಿನಲ್ಲಿಯೇ ಹೋರಾಟ ಮುನ್ನಡೆಯಬೇಕು. ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲು ಬದ್ಧ’ ಎಂದರು.
ಹೋರಾಟಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಂಘದ ವತಿಯಿಂದ ಪ್ರಧಾನಿ, ಮುಖ್ಯಮಂತ್ರಿ ಹಾಗೂ ರಾಜ್ಯದ 27 ಸಂಸದರು ಮತ್ತು ರಾಜ್ಯಸಭಾ ಸದಸ್ಯರಿಗೆ ಮನವಿ ಸಲ್ಲಿಸಲಾಗುವುದು. ಸಾಮಾಜಿಕ ಜಾಲತಾಣವನ್ನು ಹೋರಾಟಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಕ್ಷೇತ್ರದ ಪ್ರತಿಯೊಬ್ಬರೂ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಮುಂದಿನ ದಿನಗಳಲ್ಲಿ ಸಂಘದ ನಿರ್ಧಾರವನ್ನು ಜಿಲ್ಲಾ ಮತ್ತು ರಾಜ್ಯ ಸಂಘಕ್ಕೂ ತಿಳಿಸುವ ಮೂಲಕ ಹೋರಾಟಕ್ಕೆ ಹೆಚ್ಚಿನ ಶಕ್ತಿ ತುಂಬಲಾಗುವುದು ಎಂದು ಹೇಳಿದರು.
‘ಕಾರ್ಖಾನೆ ಆದೇಶ ಹಿಂಪಡೆಯುವವರೆಗೂ ನಮ್ಮ ಹೋರಾಟ ನಡೆಯಲಿದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಹೋರಾಟಕ್ಕೆ ದಿನದಿಂದ ದಿನಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದ್ದು, ಅದರಲ್ಲೂ ಪತ್ರಕರ್ತರು ಬೆಂಬಲ ನೀಡಿರುವುದು ಆನೆ ಬಲ ಬಂದಂತಾಗಿದೆ’ ಎಂದು ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಹೇಳಿದರು.
ಪತ್ರಕರ್ತರಾದ ಕಣ್ಣಪ್ಪ, ಎನ್. ಬಾಬು, ಗಂಗಾನಾಯ್ಕ ಗೊಂದಿ, ಜಿ. ಸುಭಾಷ್ರಾವ್ ಸಿಂಧ್ಯಾ, ಸತೀಶ್, ರಂಗನಾಥ ರಾವ್, ವೀರೇಂದ್ರ, ಜಿ. ಮಹಾಂತೇಶ್, ಅನಂತಕುಮಾರ್, ರವೀಂದ್ರನಾಥ್, ಸುಧೀಂದ್ರ, ಬಸವರಾಜ್, ಸುದರ್ಶನ್, ಶಿವಶಂಕರ್, ಬಿ.ಆರ್. ಬದರಿನಾರಾಯಣ, ಕೆ.ಆರ್ ಶಂಕರ್, ಫಿಲೋಮಿನಾ, ಕೂಡ್ಲಿಗೆರೆ ಮಂಜುನಾಥ್, ಶೈಲೇಶ್ ಕೋಠಿ, ಧನಂಜಯ, ಮಹೇಶ್ ಹಾಗೂ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರು, ಮಹಿಳೆಯರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.