ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಕೇಂದ್ರದಲ್ಲಿ ಅವ್ಯವಸ್ಥೆ: ಮುಖ್ಯಮಂತ್ರಿಗೆ ಪತ್ರ

Last Updated 7 ಅಕ್ಟೋಬರ್ 2020, 13:51 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಬಂದಗದ್ದೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಕೋವಿಡ್ ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ ಇದ್ದು, ಕೂಡಲೆ ಅದನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಪತ್ರ ಬರೆದಿದ್ದಾರೆ.

ಸರ್ಕಾರ ಕೋವಿಡ್ ಆರೈಕೆ ಕೇಂದ್ರದಲ್ಲಿನ ಓರ್ವ ರೋಗಿಯ ಊಟೋಪಚಾರಕ್ಕಾಗಿ ದಿನಕ್ಕೆ ₹ 250 ಭರಿಸುತ್ತಿದೆ. ಈ ಹಣದಿಂದ ಅತ್ಯುತ್ತಮ ಗುಣಮಟ್ಟದ ಆಹಾರ ಒದಗಿಸಬಹುದು. ಆದರೆ ಬಂದಗದ್ದೆ ಗ್ರಾಮದ ಆರೈಕೆ ಕೇಂದ್ರದಲ್ಲಿ ರೋಗಿಗಳಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದ್ದು ಮೂರು ದಿನಗಳಿಂದ ಊಟ ಮಾಡಿಲ್ಲ ಎಂದು ಅಲ್ಲಿನ ರೋಗಿಗಳು ದೂರಿದ್ದಾರೆ ಎಂದು ಹಕ್ರೆ ತಿಳಿಸಿದ್ದಾರೆ.

ಬಂದಗದ್ದೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಒಬ್ಬರೇ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ದಿನದ 24 ಗಂಟೆ ಇವರೆ ಕರ್ತವ್ಯ ನಿರ್ವಹಿಸಬೇಕಾಗಿದೆ. ಅಲ್ಲದೆ ಯಾವುದೇ ಸ್ಟಾಫ್ ನರ್ಸ್ ಕೂಡ ಇಲ್ಲಿ ಇಲ್ಲ. ಸಂಬಂಧಪಟ್ಟವರಿಗೆ ಈ ವಿಷಯವನ್ನು ಗಮನಕ್ಕೆ ತಂದರೂ ಲೋಪವನ್ನು ಸರಿಪಡಿಸುತ್ತಿಲ್ಲ ಎಂದು ಪತ್ರದಲ್ಲಿ ದೂರಿದ್ದಾರೆ.

ಆರೈಕೆ ಕೇಂದ್ರ ಗ್ರಾಮಾಂತರ ಪ್ರದೇಶದಲ್ಲಿದ್ದು, ಪದೇ ಪದೇ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಆದರೆ ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಇದ್ದರೂ ಅದಕ್ಕೆ ಡೀಸೆಲ್ ಪೂರೈಸುತ್ತಿಲ್ಲ. ಕೋವಿಡ್‌ನಿಂದ ಗುಣಮುಖರಾದ ರೋಗಿಗಳನ್ನು ಅವರ ಮನೆಗಳಿಗೆ ತಲುಪಿಸಲು ವಾಹನದ ವ್ಯವಸ್ಥೆ ಇಲ್ಲ. ತಾಲ್ಲೂಕಿನಲ್ಲಿ ಕೋವಿಡ್‌ ಸಾವಿನ ಅನುಪಾತದ ಪ್ರಮಾಣ ಶೇ 4.77 ತಲುಪಿದೆ. ಹೀಗಾಗಿ ಕೋವಿಡ್ ಆರೈಕೆ ಕೇಂದ್ರದಲ್ಲಿನ ಅವ್ಯವಸ್ಥೆಗೆ ಕಾರಣರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.

ಪತ್ರದ ಜೊತೆಗೆ ರೋಗಿಗಳ ದೂರಿನ ಅರ್ಜಿ, ಆರೈಕೆ ಕೇಂದ್ರದಲ್ಲಿನ ಅವ್ಯವಸ್ಥೆಯ ವಿಡಿಯೊ ಲಗತ್ತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT