ಭದ್ರಾವತಿ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದ್ದು, ಅದಕ್ಕೆ ದಿಕ್ಸೂಚಿ ರೂಪದಲ್ಲಿ ಬಂದಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಆರ್. ಪ್ರಸನ್ನಕುಮಾರ್ ಅವರನ್ನು ಬೆಂಬಲಿಸಿ’ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಕರೆ ನೀಡಿದರು.
ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಸನ್ನಕುಮಾರ್ ಅವರ ಪರವಾಗಿ ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಜರುಗಿದ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಆಡಳಿತದಲ್ಲಿ ಕಾಂಗ್ರೆಸ್ ಶಾಸಕರು ಇರುವೆಡೆ ಹೆಚ್ಚಿನ ಅನುದಾನ ಸಿಕ್ಕಿಲ್ಲ. ಜತೆಗೆ ಸ್ಥಳೀಯ ಸಂಸ್ಥೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುವಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ ಎಂದು ಕಿಡಿಕಾರಿದರು.
ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚುವರಿಯಾಗಿ ಅನುದಾನ ಕೊಡಿಸುವ ಜತೆಗೆ ಪ್ರತಿನಿಧಿಗಳ ಹಿತ ಕಾಪಾಡುವ ಕೆಲಸವನ್ನು ಪಕ್ಷವು ಮಾಡಲಿದೆ ಎಂದು ಭರವಸೆ ನೀಡಿದರು.
ಅಭ್ಯರ್ಥಿ ಪ್ರಸನ್ನಕುಮಾರ್, ‘ನನ್ನ ಅಧಿಕಾರವಧಿಯಲ್ಲಿ ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದೇನೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರ ಕೂಪದಿಂದ ಸೊರಗಿದೆ. ಗ್ರಾಮೀಣ ಭಾಗದ ಸಮಸ್ಯೆಗಳು ಹಾಗೂ ಅಲ್ಲಿನ ಸದಸ್ಯರ ಕುರಿತಾಗಿ ಮಾಹಿತಿ ಇಲ್ಲದ ವ್ಯಕ್ತಿಗಳನ್ನು ಚುನಾಯಿಸುವ ಬದಲು ಅನುಭವ ಇರುವ ನನ್ನನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಶಾಂತವೀರನಾಯ್ಕ, ನಗರಸಭೆ ಅಧ್ಯಕ್ಷೆ ಗೀತಾರಾಜಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಮಣಿಶೇಖರ್ ಉಪಸ್ಥಿತರಿದ್ದರು.