ಶಿವಮೊಗ್ಗ: ಏಪ್ರಿಲ್ 26 ಹಾಗೂ ಮೇ 7ಕ್ಕೆ ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಸಮೀಪದ ಸಕ್ರೈಬೆಲು ಆನೆ ಬಿಡಾರದಲ್ಲಿ ಪ್ರವಾಸಿಗರಿಗೆ ಮನವಿ ಮಾಡಿದರು.
ಮತದಾನದ ದಿನದಂದು ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಗ್ರಾಮ ಪಂಚಾಯಿತಿ ಗಾಜನೂರು ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನದ ವೇಳೆ ಅವರು ಪ್ರವಾಸಿಗರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಮತದಾರರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್. ಗಾಯತ್ರಿ ಪ್ರತಿಜ್ಞಾ ವಿಧಿ ಬೋಧಿಸಿದರು. ‘ಮತದಾನ ನಮ್ಮ ನಿಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ಹಕ್ಕನ್ನು ತಪ್ಪದೆ ಚಲಾಯಿಸಿ ಜವಾಬ್ದಾರಿಯುತ ಪ್ರಜೆಯಾಗೋಣ’ ಎಂದು ಜಿಲ್ಲಾ ಸ್ವೀಪ್ ರಾಯಭಾರಿ ಕೆ.ಎಸ್.ಶುಭ್ರತಾ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಸ್ಎಲ್ಎಂಟಿ ನವೀದ್ ಅಹಮದ್ ಪರ್ವೀಜ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು, ಜಿಲ್ಲಾ ಪಂಚಾಯಿತಿ ಸಿಬ್ಬಂದಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಮತದಾನ ಜಾಗೃತಿಗೆ ಸೈಕಲ್ ಜಾಥಾ
ಮತದಾನ ಜಾಗೃತಿ ಅಂಗವಾಗಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಶಿವಮೊಗ್ಗ ಸೈಕಲ್ ಕ್ಲಬ್ ಜೆಸಿಐ ಶಿವಮೊಗ್ಗ ಮಲ್ನಾಡ್ ಹಾಗೂ ವಿವಿಧ ಸಂಘಟನೆಗಳು ಸಹಯೋಗದೊಂದಿಗೆ ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮುಖ್ಯ ಯೋಜನಾ ಅಧಿಕಾರಿ ಗಾಯತ್ರಿ ಉಪಸ್ಥಿತರಿದ್ದರು.