2025ಕ್ಕೆ ಕ್ಷಯರೋಗ ಮುಕ್ತ ರಾಜ್ಯ: ಕ್ಷಯ ರೋಗ ಘಟಕದ ನೋಡಲ್ ಅಧಿಕಾರಿ ಡಾ.ಅನಿಲ್

ಶಿವಮೊಗ್ಗ: ಕ್ಷಯ ರೋಗ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. 2025ಕ್ಕೆ ಕ್ಷಯ ರೋಗ ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಲಾಗಿದೆ ಎಂದು ಕ್ಷಯ ರೋಗ ಘಟಕದ ನೋಡಲ್ ಅಧಿಕಾರಿ ಡಾ.ಅನಿಲ್ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಕ್ಷಯ ರೋಗ ಪ್ರಯೋಗಾಲಯವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸುಮಾರು 26 ಲಕ್ಷ ಮಂದಿ ಕ್ಷಯರೋಗ ಬಾಧಿತರಿದ್ದಾರೆ. ಪ್ರತಿವರ್ಷ 4 ಲಕ್ಷ ಮಂದಿ ಮರಣ ಹೊಂದುತ್ತಿದ್ದಾರೆ. ಕೊರೊನಾ ಸಮಯದಲ್ಲಿ ರಾಜ್ಯದ 57 ಸಾವಿರ ಮಂದಿಗೆ ಕ್ಷಯ ರೋಗ ನಿಯಂತ್ರಣಕ್ಕೆ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಘಟಿತ ಪ್ರಯತ್ನದಿಂದ ಕ್ಷಯ ರೋಗ ನಿಯಂತ್ರಿಸಲು ಸಾಧ್ಯವಿದೆ. ಈ ಅವಧಿಯಲ್ಲಿ ರೋಗದ ನಿಯಂತ್ರಣಕ್ಕಾಗಿ ಹಲವು ಪ್ರಯೋಗಗಳನ್ನು ನಡೆಸಲಾಗಿದೆ ಎಂದು ವಿವರ ನೀಡಿದರು.
ಪ್ರಯೋಗಾಲಯ ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ‘ಕೊರೊನಾ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಮತ್ತು ತಂತ್ರಜ್ಞರ ಸಂಘಟಿತ ಪ್ರಯತ್ನದಿಂದ ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗಿದೆ’ ಎಂದು ಹೇಳಿದರು.
ಜಿಲ್ಲೆಯ ಜನರ ಆರೋಗ್ಯ ಸಮಸ್ಯೆಗಳ ಸಕಾಲಿಕ ಪರಿಹಾರಕ್ಕೆ ಸರ್ಕಾರ ಎಲ್ಲಾ ಸಮಯದಲ್ಲೂ ಅಗತ್ಯ ನೆರವು ನೀಡಿ ಸಹಕರಿಸಿದ್ದಾರೆ. ಉತ್ತಮ ಸೇವೆ ಒದಗಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ಕ್ಷಯ ರೋಗ ನಿಯಂತ್ರಣಕ್ಕಾಗಿ ಮೊದಲ ಚಿಕಿತ್ಸಾ ಪ್ರಯೋಗಾಲಯ ಶಿವಮೊಗ್ಗದಲ್ಲಿ ಆರಂಭಗೊಂಡಿರುವುದು ಸಂತಸ ತಂದಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಡಾ.ಅನಿಲ್, ಡಾ.ಸ್ಫೂರ್ತಿಗೌಡ, ಪರಿಮಾಣು ಕ್ರಿಮಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ರಘುನಂದನ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.