ಸೊರಬ: ತಾಲ್ಲೂಕಿನ ನಿಸರಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಗೋಡು ಗ್ರಾಮದ ಬಳಿ ಹಾದು ಹೋಗುವ ಸಂಪರ್ಕ ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.
ರಸ್ತೆ ದುರಸ್ತಿಗೆ ಒತ್ತಾಯಿಸಿ ಬುಧವಾರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾಮದ ರಾಘವೇಂದ್ರ, ‘ಈ ರಸ್ತೆ ಸೊರಬ–ಸಾಗರ ಮುಖ್ಯರಸ್ತೆಯಿಂದ ನಿಸರಾಣಿ, ಮಾಸೂರು ಮಾರ್ಗವಾಗಿ ತಾಳಗುಪ್ಪ ಸೇರುತ್ತದೆ. ಕುಪ್ಪೆಯಿಂದ ನಿಸರಾಣಿವರೆಗೂ ರಸ್ತೆ ಸಂಪೂರ್ಣ ಹಾಳಾಗಿದೆ. ನಾಲ್ಕು ವರ್ಷಗಳಿಂದ ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದರಿಂದ ಡಿ. 27ರಂದು ನಡೆಯುವ ಗ್ರಾಮ ಪಂಚಾಯಿತಿ ಮತದಾನ ಬಹಿಷ್ಕರಿಸಲು ಗ್ರಾಮಸ್ಥರು ಒಮ್ಮತದಿಂದ ತೀರ್ಮಾನಿಸಿದ್ದೇವೆ’ ಎಂದು ತಿಳಿಸಿದರು.