ಹೊಸನಗರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರ ಅನುದಾನದ ದುರ್ಬಳಕೆ ಮತ್ತು ಅವ್ಯಹಾರ ನಡೆದಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿ ತ್ರಿಣಿವೆ ಗ್ರಾಮ ಪಂಚಾಯಿತಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.
‘ತ್ರಿಣಿವೆ ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸಿದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಗ್ರಾಮಸ್ಥರು ದೂರು ನೀಡುತ್ತಲೇ ಬಂದಿದ್ದಾರೆ. ಲೋಕಾಯುಕ್ತಕ್ಕೂ ದೂರು ಸಲ್ಲಿಸಲಾಗಿದೆ. ಯಾವುದೇ ಪ್ರಯೋಜನ ವಾಗಿಲ್ಲ. ಅಧಿಕಾರಿಗಳು ತಪ್ಪಿತಸ್ಥರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯಿತಿಯ ಹಿಂದಿನ ಕಾರ್ಯದರ್ಶಿ ವಿ.ಬಿ. ರಮೇಶ ಮತ್ತು ಅಧ್ಯಕ್ಷೆ ಸವಿತಾ ಹಾಗೂ ಕೆಲ ಸದಸ್ಯರು ಅವ್ಯಹಾರದಲ್ಲಿ ಭಾಗಿ ಆಗಿದ್ದಾರೆ. ಕೆಲ ಸದಸ್ಯರು ಈ ಬಾರಿಯೂ ಆಯ್ಕೆಯಾಗಿರುವುದರಿಂದ ಸಾಕ್ಷಿ ನಾಶಪಡಿಸುವ ಸಾಧ್ಯತೆಗಳಿವೆ. ಭ್ರಷ್ಟಾಚಾರದ ಬಗ್ಗೆ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಹಲವು ಸಂಶಯಕ್ಕೆ ಎಡೆ ಮಾಡಿದೆ. ಎಲ್ಲಾ ಕಾಮಗಾರಿಗಳ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ ಸ್ವಾಮಿರಾವ್, ತಾಲ್ಲೂಕು ಪಂಚಾಯಿತಿ ಇ.ಒ. ಪ್ರವೀಣ್, ಎಸ್.ಐ ರಾಜೇಂದ್ರ ನಾಯ್ಕ ಭೇಟಿ ನೀಡಿದರು.