ಶಿವಮೊಗ್ಗ: ಜಿಲ್ಲೆಯ ನೋಂದಾಯಿತ 33,500 ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವಲಂಬಿತರಿಗೆ ಜೂನ್ 28ರಂದು ಕುವೆಂಪು ರಂಗ ಮಂದಿರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಆರೋಗ್ಯ ತಪಾಸಣೆ ವೇಳೆ ಯಾರಿ ಗಾದರೂ ಗಂಭೀರ ಕಾಯಿಲೆಗಳು ಪತ್ತೆ ಯಾದರೆ ಅವರಿಗೆ ಚಿಕಿತ್ಸೆ ಕೊಡಿಸಿ ವೆಚ್ಚ ವನ್ನು ಭರಿಸಲಾಗುವುದು ಎಂದರು.
ಕಟ್ಟಡ ಕಾರ್ಮಿಕರಿಗೆ ಶಿವಮೊಗ್ಗ ತಾಲ್ಲೂಕಿನ ಸಿದ್ಲೀಪುರ ಗ್ರಾಮದಲ್ಲಿ ವಲಸೆ ಕಾರ್ಮಿಕರಿಗೆ ₹10 ಕೋಟಿ ವೆಚ್ಚದಲ್ಲಿ 96 ಸುಸಜ್ಜಿತ ಮನೆಗಳ ನಿರ್ಮಾಣಕ್ಕೆ ಇದೇ ವೇಳೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭದ್ರಾವತಿ ಸಮೀಪದ ಉಜ್ಜಿನಿಪುರದಲ್ಲಿ ₹50 ಲಕ್ಷ ವೆಚ್ಚದಲ್ಲಿ ಕಾರ್ಮಿಕ ಭವನ ನಿರ್ಮಾಣಕ್ಕೂ ಇದೇ ವೇಳೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
ಮಲೆನಾಡಿನಲ್ಲಿ ಕಾಲುಸಂಕ: ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 634 ಕಾಲು ಸಂಕಗಳ ನಿರ್ಮಾಣ ಮಾಡಲು ₹35 ಕೋಟಿ ಹಣ ಕೇಂದ್ರ ಸರ್ಕಾರ ನೀಡಲಿದೆ. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾಲುಸಂಕ ನಿರ್ಮಾಣ ಮಾಡಲಾಗುವುದು ಎಂದರು.
ಅನುತ್ಪಾದಕತೆ ನೀಗಿಸಲು ಕ್ರಮ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಶೇಷವಾಗಿ ತಾಂಡಾ ಮತ್ತು ಪರಿಶಿಷ್ಟರ ಜಾನುವಾರುಗಳಲ್ಲಿ ಬಂಜೆತನ ಕಂಡು ಬಂದಿದೆ. ಸರಿಯಾದ ಸಮಯಕ್ಕೆ ಗರ್ಭಧಾರಣೆಯಾಗದಿದ್ದರೆ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ರೈತರಿಗೆ ಆರ್ಥಿಕ ಸಮಸ್ಯೆ ಎದುರಾಗದಂತೆ ಅನುದಾನ ನೀಡಲು ಸಚಿವರು ಒಪ್ಪಿಕೊಂಡಿದ್ದಾರೆ ಎಂದರು.
ಪುರಾತತ್ವ ಇಲಾಖೆ ಸಹಯೋಗ ದಲ್ಲಿ ಬಿದನೂರಿನ ಕೋಟೆ ಅಭಿವೃದ್ಧಿಗೆ ಕೇಂದ್ರದ ನೆರವು ಕೇಳಲಾಗಿದೆ. ಈಗಾಗಲೇ ರಾಜ್ಯ ಸರ್ಕಾರದಿಂದ ₹ 1 ಕೋಟಿ ನೆರವು ಸಿಕ್ಕಿದೆ. ಹಾಗೆಯೇ ಶಿಕಾರಿಪುರದ ಅಲ್ಲಮ ಪ್ರಭು ಕ್ಷೇತ್ರದ ಅಭಿವೃದ್ಧಿಗೆ ಮತ್ತು ಭದ್ರಾವತಿಯ ಲಕ್ಷ್ಮೀನರಸಿಂಹ ದೇವಸ್ಥಾನದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ, ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಎಂ.ಬಿ. ಭಾನುಪ್ರಕಾಶ್, ಟಿ.ಡಿ.ಮೇಘರಾಜ್, ಎಸ್.ದತ್ತಾತ್ರಿ, ಎಸ್.ಎಸ್.ಜ್ಯೋತಿ ಪ್ರಕಾಶ್, ಪೆರುಮಾಳ್, ಸುಂದರ್ಬಾಬು, ಕೆ.ವಿ.ಅಣ್ಣಪ್ಪ ಇದ್ದರು.