ಬೆಂಗಳೂರು: ಅರ್ಕಾವತಿ ಬಡಾವಣೆ ನಿರ್ಮಾಣ ಸಂಬಂಧ 2010ರಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನುಷ್ಠಾನದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತಂತೆ ಎಚ್.ಬಿ. ಶಿವರಾಂ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
‘ಸುಪ್ರೀಂಕೋರ್ಟ್ ಆದೇಶ ಆಧರಿಸಿ ಹೆಬ್ಬಾಳ-ಕೆಂಪಾಪುರ ಪ್ರದೇಶಗಳಲ್ಲಿ ದ್ವೀಪಗಳಂತಿದ್ದ ಎಷ್ಟು ಜಮೀನನ್ನು ಸ್ವಾಧೀನದಿಂದ ಕೈಬಿಡಲಾಗಿದೆ, ಎಷ್ಟು ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ, ಎಷ್ಟು ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಎಲ್ಲ ವಿವರಗಳನ್ನೂ ನೀಡಿ’ ಎಂದು ನ್ಯಾಯಪೀಠ ನಿರ್ದೇಶಿಸಿದೆ.
‘ನಮ್ಮ ಸ್ವಾಧೀನದಲ್ಲಿರುವ 20 ಗುಂಟೆ ಜಮೀನನ್ನು ಸ್ವಾಧೀನದಿಂದ ಕೈಬಿಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಈ ಕುರಿತ ಸುಪ್ರೀಂಕೋರ್ಟ್ ಆದೇಶವನ್ನು ಬಿಡಿಎ ಪರಿಗಣಿಸುತ್ತಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.
2010ರ ಮೇ 5ರಂದು ಸುಮಾರು 2,700 ಎಕರೆ ವಿಸ್ತೀರ್ಣದ ಅರ್ಕಾವತಿ ಬಡಾವಣೆ ನಿರ್ಮಾಣ ಭೂ ಸ್ವಾಧೀನ ಪ್ರಕ್ರಿಯೆಯನ್ನು ಎತ್ತಿಹಿಡಿದಿದ್ದ ಸುಪ್ರೀಂಕೋರ್ಟ್, 2003ರಲ್ಲಿ ಬಡಾವಣೆ ನಿರ್ಮಾಣಕ್ಕೆ ಗುರುತಿಸಿದ್ದ ಒಟ್ಟಾರೆ ಭೂಮಿಯಲ್ಲಿ ಯೋಗ್ಯವಲ್ಲದ ಜಮೀನುಗಳನ್ನು ಸ್ವಾಧೀನದಿಂದ ಕೈಬಿಡುವಂತೆಆದೇಶಿಸಿತ್ತು.