ತುಮಕೂರು: ಕಳೆದ ನಾಲ್ಕು ವರ್ಷಗಳಲ್ಲಿ ಜಿಲ್ಲೆಯಲ್ಲಿ 13,002 ಮಂದಿ ಎಚ್ಐವಿ ಸೋಂಕಿಗೆ ಒಳಗಾಗಿದ್ದು, 11,006 ಮಂದಿಗೆ ಚಿಕಿತ್ಸೆ ನೀಡಲಾಗಿದೆ. 4,008 ಮಂದಿ ಮರಣ ಹೊಂದಿದ್ದು, 6,974 ಜನರು ಎಚ್ಐವಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ತಿಳಿಸಿದರು.
ಎಚ್ಐವಿ, ಏಡ್ಸ್ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಜಿಲ್ಲಾಆಸ್ಪತ್ರೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಚ್ಐವಿ ಸೋಂಕಿನ ಪ್ರಮಾಣ ತಡೆಗಟ್ಟುವ ನಿಟ್ಟಿನಲ್ಲಿ 17 ಐಸಿಟಿಸಿ ಕೇಂದ್ರಗಳಿವೆ. 3 ಎಆರ್ಟಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಪರೀಕ್ಷೆ ಮಾಡಲಾಗುತ್ತಿದೆ. 12 ಐಸಿಟಿಸಿ ಕೇಂದ್ರಗಳಲ್ಲಿ ಎಆರ್ಟಿ ಕೇಂದ್ರ ಸ್ಥಾಪಿಸಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಕಾನೂನಿನ ಅಡಿಯಲ್ಲಿ ಸೋಂಕಿತರಿಗೆ ಉಚಿತವಾಗಿ ಕಾನೂನು ನೆರವು ನೀಡುವುದಕ್ಕೆ ಕಾನೂನು ಸೇವೆಗಳ ಪ್ರಾಧಿಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಭಾರತೀಯ ವೈದ್ಯಕೀಯ ಸಂಘದ ಡಾ.ಶ್ರೀನಾಥ್, ಸರ್ಕಾರಿ ವೈದ್ಯರ ಸಂಘದ ಡಾ.ರಾಜಶೇಖರಯ್ಯ, ಡಾ.ಮೋಹನ್ ದಾಸ್, ಮಾರ್ಸ್-ಕೆ ಸಂಸ್ಥೆಯ ಚಂದ್ರಪ್ಪ, ಬೆಳ್ಳಿಲೋಕೆಶ್ ಉಪಸ್ಥಿತರಿದ್ದರು.