ಕೊರಟಗೆರೆ: ಕೋವಿಡ್ ಪ್ರಕರಣ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ಆದೇಶಿಸಿಲಾಗಿದೆ. ಜಾತ್ರೆ, ನಾಟಕ, ಸಾರ್ವಜನಿಕ ಸಭೆಗಳನ್ನು ನಿರ್ಬಂಧಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು ಮಾತನಾಡಿದರು.
ಪಟ್ಟಣದ ಮುಖ್ಯರಸ್ತೆ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿರುವ ಕಾರಣ ಕಾಮಗಾರಿಯನ್ನು ಕಾಲಮಿತಿ ಒಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯ ಭೂಸ್ವಾದೀನಕ್ಕಾಗಿ ₹122 ಕೋಟಿಯನ್ನು ಸರ್ಕಾರ ಬಿಡುಗಡೆಗೊಳಿಸಿದೆ. ಹೊಸ ಸ್ವಾಧೀನ ನೀತಿಯಂತೆ ಯೋಜನೆಗೆ ಚಾಲನೆ ನೀಡಲಾಗುವುದು. ಯೋಜನೆ ಕಾಮಗಾರಿ ಬಗ್ಗೆ ಜಲಸಂಪಮ್ಮೂಲ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಹೊಸ ನೀತಿಯ ಪ್ರಕಾರ ಭೂಸ್ವಾದೀನ ಪ್ರಕ್ರಿಯೆ ನಡೆಸಲಾಗುವುದು ಎಂದರು.
ಪ್ರತಿ ಗ್ರಾಮಗಳಲ್ಲೂ ಸಾರ್ವಜನಿಕ ಸ್ಮಶಾನ ವ್ಯವಸ್ಥೆಗೊಳಿಸುವಂತೆ ಸುಪ್ರೀಂ ಹಾಗೂ ಹೈಕೋರ್ಟ್ ನಿರ್ದೇಶನ ನೀಡವೆ. ಅದರಂತೆ ಕೊರಟಗೆರೆ ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲೂ ಸ್ಮಶಾನಕ್ಕಾಗಿ ಸರ್ಕಾರಿ ಭೂಮಿ ಗುರುತಿಸಿ ಮೀಸಲಿಡಲು ಹಾಗೂ ಸರ್ಕಾರಿ ಭೂಮಿ ಇಲ್ಲದ ಕಡೆ ಖಾಸಗಿ ಭೂಮಿ ಖರೀದಿಸಲು ಸೂಚಿಸಲಾಗಿದೆ ಎಂದರು.
ಸರ್ಕಾರಿ ಬಸ್ ಸಿಬ್ಬಂದಿ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜಿಲ್ಲೆಯಾದ್ಯಂತ 1,580 ಖಾಸಗಿ ಬಸ್, ಮ್ಯಾಕ್ಸಿ ಕ್ಯಾಬ್ ವ್ಯವಸ್ಥೆ ಮಾಡಲಾಗಿದೆ ಎಂದರು.
ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಶಿರಸ್ತೇದಾರ್ ಚಂದ್ರಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಕುಮಾರ್, ಕಂದಾಯ ಅಧಿಕಾರಿ ಪ್ರತಾಪ್, ವಿಎ ಬಸವರಾಜು ಇದ್ದರು.