ಗುಬ್ಬಿ: ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ಶುದ್ಧ ನೀರಿನ ಘಟಕವು ಕೆಟ್ಟು ಒಂದೂವರೆವರ್ಷ ಕಳೆದಿದ್ದು, ಇನ್ನೂ ದುರಸ್ತಿಯಾಗಿಲ್ಲ.
ನೀರಿನ ಘಟಕ ಸ್ಥಾಪಿಸಿದ ಕೆಲವೇ ತಿಂಗಳು ಕಾರ್ಯನಿರ್ವಹಿಸಿ ನಂತರ ಕೆಟ್ಟುಹೋಗಿದೆ. ನಿತ್ಯವೂ ನೂರಾರು ಪ್ರಯಾಣಿಕರು ಸಂಚರಿಸುವ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಡುವಂತಾಗಿದೆ.
ಅಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದ್ದರೂ ಈವರೆಗೂ ಕ್ರಮ ಕೈಗೊಂಡಿಲ್ಲ. ಇಲ್ಲಿನ ನೀರಿನ ಘಟಕ ನಿಲ್ದಾಣದ ಒಂದು ಮೂಲೆಯಲ್ಲಿದ್ದು, ಅದನ್ನು ಬಸ್ ನಿಲ್ದಾಣದ ಮುಖ್ಯ ದ್ವಾರದ ಬಳಿ ಅಳವಡಿಸಿದರೆ ಅನುಕೂಲವಾಗುತ್ತದೆ. ಅಧಿಕಾರಿಗಳಿಗೆ ಈ ವಿಷಯ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಪಟ್ಟಣದ ಮಧು.
ಬಸ್ ನಿಲ್ದಾಣದಲ್ಲಿನ ಸಮಸ್ಯೆಗಳ ಬಗ್ಗೆ ಸ್ಥಳೀಯ ಸಾರಿಗೆ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದರೆ ಮೇಲಧಿಕಾರಿಗಳಿಗೆ ತಿಳಿಸಬೇಕು ಎನ್ನುತ್ತಾರೆ. ಡಿಟಿಒ ಅವರಿಗೆ ಕರೆ ಮಾಡಿದರೆ ಎಂಜಿನಿಯರ್ ಅವರಿಗೆ ಕರೆ ಮಾಡುವಂತೆ ಹೇಳುತ್ತಾರೆ. ಎಂಜಿನಿಯರ್ ನಾಗರಾಜು ಅವರಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಹೀಗಾಗಿ ಇಲ್ಲಿನ ಸಮಸ್ಯೆಗಳ ಬಗ್ಗೆ ಯಾರು ಬಳಿ ಹೇಳುವುದು ಎನ್ನುವುದು ತಿಳಿಯದೆ ಪ್ರಯಾಣಿಕರು ಗೊಂದಲದಲ್ಲಿದ್ದಾರೆ.
ಜನಪ್ರತಿನಿಧಿಗಳು ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿಲ್ಲ. ಅಧಿಕಾರಿಗಳು ತಕ್ಷಣ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎನ್ನುತ್ತಾರೆ ಕುಮಾರ್.