ಗುಬ್ಬಿ: ಪಟ್ಟಣ ಹೊರವಲಯದಲ್ಲಿರುವ ಪಟ್ಟಣ ಪಂಚಾಯಿತಿಗೆ ಸೇರಿದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ.
ಘಟಕದಲ್ಲಿ ಸಾಕಷ್ಟು ಪ್ಲಾಸ್ಟಿಕ್ ತ್ಯಾಜ್ಯ ಇದ್ದುದರಿಂದ ಬೆಂಕಿ ಬಿದ್ದ ತಕ್ಷಣ ಸುತ್ತಮುತ್ತ ಹೊಗೆಯ ಜೊತೆ ಆವರಿಸಿಕೊಂಡ ಕೆಟ್ಟ ವಾಸನೆಯಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು.
ಇದನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದರು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯರಾದ ಜಿ.ಆರ್. ಶಿವಕುಮಾರ್, ಮೊಹಮ್ಮದ್ ಸಾಧಿಕ್, ಆರೋಗ್ಯ ನಿರೀಕ್ಷಕಿ ವಿದ್ಯಾಶ್ರೀ, ಎಂಜಿನಿಯರ್ ಬಿಂದುಸಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಅಧ್ಯಕ್ಷ ಅಣ್ಣಪ್ಪ ಸ್ವಾಮಿ ಮಾತನಾಡಿ, ಪಟ್ಟಣ ಪಂಚಾಯಿತಿಯಿಂದ ಖರೀದಿಸಿರುವ ಕಸ ಬೇರ್ಪಡಿಸುವ ಯಂತ್ರ ಅಳವಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅವರಿಗೆ ಸೂಚಿಸಲಾಗುವುದು ಎಂದು ಹೇಳಿದರು.
ಬೇಸಿಗೆ ಸಮೀಪಿಸುತ್ತಿದೆ. ಇದರಿಂದ ಸಾರ್ವಜನಿಕರು ಕಸ ಸಂಗ್ರಹ ಟ್ರ್ಯಾಕ್ಟರ್ನಲ್ಲಿ ಬೂದಿ ಇತ್ಯಾದಿ ಹಾಕುವಾಗ ಜಾಗ್ರತೆವಹಿಸಬೇಕು. ಸಂಪೂರ್ಣವಾಗಿ ನಂದಿ ಹೋಗಿರುವ ಬೂದಿಯನ್ನು ಮಾತ್ರ ಒಣ ಕಸದ ಜೊತೆಯಲ್ಲಿ ಹಾಕಬೇಕು ಎಂದು ತಿಳಿಸಿದರು.
ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಂದಿಕೊಂಡಂತೆ ಅರಣ್ಯ ಪ್ರದೇಶ ಇದೆ. ಬೆಂಕಿ ಅವಘಡ ಸಂಭವಿಸಿದರೆ ಗಿಡಗಳು ಹಾಗೂ ಪ್ರಾಣಿ- ಪಕ್ಷಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಶಿವಕುಮಾರ್ ತಿಳಿಸಿದರು.