ಮಧುಗಿರಿ: ಹೈನುಗಾರರು ಶುದ್ಧವಾದ ಹಾಲನ್ನು ಸರಬರಾಜು ಮಾಡುವ ಮೂಲಕ ಮಾರುಕಟ್ಟೆ ವಿಸ್ತರಿಸಲು ಸಹಕಾರ ನೀಡಬೇಕು ಎಂದು ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.
ಪಟ್ಟಣದ ಹೊರವಲಯದಲ್ಲಿರುವ ಶೀತಲ ಕೇಂದ್ರದ ಸಭಾಂಗಣದಲ್ಲಿ ಹೈನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಕಾರ ಸಂಘಗಳು ಆರ್ಥಿಕವಾಗಿ ಲಾಭಗಳಿಸಿದರೆ ಸದಸ್ಯರಿಗೆ ಹೆಚ್ಚು ಅನುಕೂಲವಾಗುತ್ತದೆ. ಆದ್ದರಿಂದ ಹೈನುಗಾರರು ಗುಣಮಟ್ಟದ ಹಾಲು ಪೂರೈಸಬೇಕು. ಉತ್ತಮ ಅಂಕಗಳಿಸುವ ಹೈನುಗಾರರ ಮಕ್ಕಳಿಗೆ ಪ್ರತಿ ವರ್ಷ ಸನ್ಮಾನಿಸಲಾಗುತ್ತಿದೆ ಎಂದರು.
ಜಿ.ಪಂ ಸದಸ್ಯ ಎಚ್. ಕೆಂಚಮಾರಯ್ಯ ಮಾತನಾಡಿ, ‘ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಿನರಸಯ್ಯ, ಸದಸ್ಯ ದೊಡ್ಡಯ್ಯ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್, ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ ಬಾಬು, ನಟರಾಜು, ಮುಖಂಡ ಸಿದ್ದಣ್ಣ, ಆರ್.ಎ.ನಾರಾಯಣ್, ಹನುಮಂತರಾಯಪ್ಪ ಇದ್ದರು.