ತುರುವೇಕೆರೆ: ತಾಲ್ಲೂಕಿನ ತೆಂಗು ಬೆಳೆಗಾರರ ಹಿತ ಕಾಪಾಡಲು ಕೊಬ್ಬರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಆರ್. ಜಯರಾಮ್ ಮನವಿ ನೀಡಿದರು.
ಶಾಸಕ ಎಂ.ಟಿ.ಕೃಷ್ಣಪ್ಪ ಅವರನ್ನು ಪಟ್ಟಣದಲ್ಲಿ ತಾಲ್ಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಪರ ಅಭಿನಂದಿಸಿ ಮಾತನಾಡಿದರು.
ಈಗಾಗಲೇ ತೆಂಗಿಗೆ ಕೀಟ, ನುಸಿ ಸೇರಿದಂತೆ ಅನೇಕ ರೋಗ ಕಾಣಿಸಿಕೊಂಡು ತೆಂಗಿನ ಇಳುವರಿ ಕಡಿಮೆಯಾಗಿ ರೈತರ ಆಸೆಗೆ ತಣ್ಣೀರು ಎರಚಿದೆ. ಮತ್ತೊಂದೆಡೆ ಕೊಬ್ಬರಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿಲ್ಲದೆ ರೈತ ಕಂಗಾಲಾಗಿದ್ದಾರೆ ಎಂದರು.
ಶಾಸಕ ಎಂ.ಟಿ.ಕೃಷ್ಣಪ್ಪ ಅವರು ಕೊಬ್ಬರಿಗೆ ವೈಜ್ಞಾನಿಕ ಬೆಲೆ ನೀಡುವ ವಿಚಾರವನ್ನು ಸದನದಲ್ಲಿ ಚರ್ಚಿಸಬೇಕು ಎಂದರು.
ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಒಂದು ಕ್ವಿಂಟಲ್ ಕೊಬ್ಬರಿಗೆ ₹3,000 ಘೋಷಿಸಿದ್ದರು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.
ಅಡಿಕೆ ಬೆಳೆಗಾರರ ಸಂಘದ ಉಪಾಧ್ಯಕ್ಷ ಪ್ರಸನ್ನ ಕುಮಾರ್, ಪುಟ್ಟೇಗೌಡ, ಕಾರ್ಯದರ್ಶಿ ಲೋಕಮ್ಮನಹಳ್ಳಿ ಕಾಂತರಾಜು, ಮಾಚೇನಹಳ್ಳಿ ಮಲ್ಲಿಕಾರ್ಜುನ್, ಕೊಪ್ಪ ನಾಗೇಶ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.