ಪಾವಗಡ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಹೆಲ್ಪ್ ಸೊಸೈಟಿ ಪದಾಧಿಕಾರಿಗಳು ಸೋಮವಾರ ಪೊಲೀಸ್ ಇನ್ಸ್ಪೆಕ್ಟರ್ ಅಜಯ ಸಾರಥಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಸಂತೆ ದಿನದಂದು ನಾಗರಕಟ್ಟೆಯಿಂದ ಶನೈಶ್ಚರ ದೇಗುಲದವರೆಗೆ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿದರು.
ಟ್ರಾಫಿಕ್ ಸಮಸ್ಯೆ ಹೆಚ್ಚಿರುವ ರಸ್ತೆಗಳನ್ನು ಗುರುತಿಸಿ ಏಕಮುಖ ಸಂಚಾರ ಹಾಗೂ ಸರಿ, ಬೆಸ ಸಂಖ್ಯೆಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಬಸ್ ನಿಲ್ದಾಣದ ಒಳಹೋಗುವ ಹಾಗೂ ಹೊರಬರುವ ವಾಹನಗಳಿಂದ ದಟ್ಟಣೆ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ, ಏಕಮುಖ ಸಂಚಾರಕ್ಕೆ ಜಿಲ್ಲಾಮಟ್ಟದಲ್ಲಿ ಅನುಮೋದನೆ ಪಡೆದು ಕಾರ್ಯಗತಗೊಳಿಸಲಾಗುವುದು. ಇನ್ನುಳಿದ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಶ್ರೀರಾಮಸೇನೆ ಅಧ್ಯಕ್ಷ ಕಾವಲಗೇರಿ ರಾಮಾಂಜಿ, ಆಟೊ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಆಂಬುಲೆನ್ಸ್ ತೇಜ, ರಾಕೇಶ್, ವೆಂಕಟೇಶ್ ನಾಯ್ಕ್, ಕೋನಪ್ಪ, ಶ್ರೀಕಾಂತ್ ಉಪಸ್ಥಿತರಿದ್ದರು.