ತುಮಕೂರು: ಕೈಗಾರಿಕೆಗಳಿಂದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಮೇಲೆ ಆಗುತ್ತಿರುವ ಸಮಸ್ಯೆಗಳ ಕುರಿತು ವರದಿ ಮಾಡಲು ಹೋಗಿದ್ದ ವೇಳೆ ಬೇಳೂರು ಬಾಯರ್ಸ್ ಕಂಪನಿಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಪತ್ರಕರ್ತರು ಮತ್ತು ಛಾಯಾಗ್ರಾಹಕರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪತ್ರಕರ್ತರು, ಛಾಯಾಗ್ರಾಹಕರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಧ್ಯಾಹ್ನ ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.
ಹಲ್ಲೆ ನಡೆಸಿದ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್, ಪದಾಧಿಕಾರಿಗಳಾದ ಎಚ್.ಟಿ.ಚಂದ್ರಶೇಖರ್, ಬರಗೂರು ವಿರೂಪಾಕ್ಷ, ಎನ್.ಎಸ್. ಮಾರುತಿ ಪ್ರಸಾದ್ ಇದ್ದರು.