ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹನೀಯರ ಆದರ್ಶ ಎಲ್ಲರಿಗೂ ತಲುಪಲಿ: ಶಿವಾನಂದ ಬಿ.ಕರಾಳೆ

Published 11 ಮೇ 2024, 6:01 IST
Last Updated 11 ಮೇ 2024, 6:01 IST
ಅಕ್ಷರ ಗಾತ್ರ

ತುಮಕೂರು: ಸಮಾಜ ಸುಧಾರಕ ಬಸವಣ್ಣ ಸೇರಿದಂತೆ ಮಹನೀಯರ ಆದರ್ಶಗಳನ್ನು ಮುಂದಿನ ತಲೆಮಾರಿಗೂ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಸಲಹೆ ಮಾಡಿದರು.

ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಸಮಾಜ ಸೇವಾ ಸಮಿತಿ, ಜಿಲ್ಲಾ ರೆಡ್ಡಿ ಜನಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

12ನೇ ಶತಮಾನದಲ್ಲಿ ಕಾಯಕ, ದಾಸೋಹ ತತ್ವಗಳನ್ನು ಚಾಲನೆಗೆ ತರುವ ಮೂಲಕ ಬಸವಣ್ಣನವರು ಸಮಾಜ ಸುಧಾರಣೆ ಮಾಡಿದರು. ಸರ್ವರು ಸಮಾನರು ಎಂಬ ಸಂದೇಶ ನೀಡಿ ಸಮ ಸಮಾಜ ನಿರ್ಮಾಣಕ್ಕೆ ನಾಂದಿಯಾಡಿದರು. ಮನುಷ್ಯರ ನಡುವೆ ಜಾತಿ, ಭೇದ ತೊಡೆದುಹಾಕಿ ಜಾತಿ ನಿವಾರಣೆಗೆ ಸಾಮಾಜಿಕ ಕ್ರಾಂತಿ ಮಾಡಿದ್ದರು. ಅಂತರ್ಜಾತಿ ವಿವಾಹಗಳನ್ನು ಮಾಡಿಸಿ ಮಾದರಿಯಾದರು ಎಂದು ಸ್ಮರಿಸಿದರು.

ಸಮಾಜದ ಅನಿಷ್ಟಗಳ ನಿರ್ಮೂಲನೆಗೆ ವಚನಗಳ ಮೂಲಕ ಜಾಗೃತಿ ಮೂಡಿಸಿದರು. ಬಸವಣ್ಣನವರ ಆದರ್ಶಗಳನ್ನು ಅಳವಡಿಸಿಕೊಂಡಿದ್ದ ಹೇಮರೆಡ್ಡಿ ಮಲ್ಲಮ್ಮ ಅವರು ಸಮಾಜ ಸುಧಾರಣೆಗೆ ನೆರವಾಗಿದ್ದರು ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಬಸವಣ್ಣನವರು ವಚನಗಳ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಉಂಟು ಮಾಡಿದರು. ಮೇಲು, ಕೀಳೆಂಬ ಭಾವನೆ ದೂರ ಮಾಡಿ, ಜನರ ಕಷ್ಟ ಕಾರ್ಪಣ್ಯ ನಿವಾರಣೆಗೆ ಮಾರ್ಗದರ್ಶನ ಮಾಡಿದರು. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ವಚನ ಸಂದೇಶಗಳು ಸದಾ ಉಳಿಯುತ್ತವೆ’ ಎಂದು ಅಭಿಪ್ರಾಯಪಟ್ಟರು.

ಬಸವಣ್ಣನ ತತ್ವಗಳ ತಳಹದಿಯಲ್ಲೇ ನಮ್ಮ ಸಂವಿಧಾನ ರಚನೆಯಾಗಿದೆ. ಹೇಮರೆಡ್ಡಿ ಮಲ್ಲಮ್ಮ ಅವರು ಕುಟುಂಬ ಮಟ್ಟದಲ್ಲಿ ಪರಿವರ್ತನೆ ತಂದ ಮಹಾನ್ ಸಾಧ್ವಿ ಎಂದರು.

ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್, ಜಿಲ್ಲಾ ರೆಡ್ಡಿ ಜನಸಂಘದ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್‍ ಕುಮಾರ್ ಪಟೇಲ್, ಸಹಾಯಕ ಪ್ರಾಧ್ಯಾಪಕ ವೆಂಕಟರೆಡ್ಡಿ ರಾಮರೆಡ್ಡಿ, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಕನ್ನಡ ಪ್ರಕಾಶ್, ಕೊಪ್ಪಲ್ ನಾಗರಾಜು, ಅನುಸೂಯಮ್ಮ, ಸುರೇಶ್‍ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವಿದ್ವಾನ್ ಎಂ.ಜಿ.ಸಿದ್ಧರಾಮಯ್ಯ ಅವರು ಸಂಗ್ರಹಿಸಿರುವ ‘ಬಸವಣ್ಣನವರ ವಚನಗಳು’ ಕೃತಿ ಬಿಡುಗಡೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT