ತುಮಕೂರು: ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗೆ 6 ತಿಂಗಳ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಮಿತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಬಿಸಿಎಂ ಇಲಾಖೆ ಕಚೇರಿ ಮುಂದೆ ಜಮಾಯಿಸಿದ ಸಮಿತಿ ಕಾರ್ಯಕರ್ತರು ವೇತನ ಬಿಡುಗಡೆಗೆ ಕೋರಿ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಇಲಾಖೆ ವ್ಯಾಪ್ತಿಯಲ್ಲಿ 95 ವಸತಿ ನಿಲಯಗಳಿವೆ. ಇಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಅಡುಗೆ ಸಿಬ್ಬಂದಿ, ಅಡುಗೆ ಸಹಾಯಕರು ಮತ್ತು ಕಾವಲುಗಾರರು ಸೇರಿದಂತೆ 300ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ 6 ತಿಂಗಳಿನಿಂದ ವೇತನ ನೀಡಿಲ್ಲ ಎಂದು ಪ್ರತಿಭಟನಕಾರರು ದೂರಿದರು.
ನೌಕರರಿಗೆ ಇಎಸ್ಐ, ಪಿಎಫ್ ಸೌಲಭ್ಯ ಸಹ ನೀಡುತ್ತಿಲ್ಲ. ಕೂಡಲೇ ಬಾಕಿ ಇರುವ ವೇತನ ಬಿಡುಗಡೆಯೊಂದಿಗೆ ಈ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ಕಚೇರಿ ಮತ್ತೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.