ತಿಪಟೂರು: ‘ಬಹುದಿನಗಳಿಂದ ಪಕ್ಷದ ಕಾರ್ಯಕರ್ತರ ಅಪೇಕ್ಷೆಯಂತೆ ಶಾಸಕ ಬಿ.ಸಿ.ನಾಗೇಶ್ ಅವರಿಗೆ ಸಚಿವ ಸ್ಥಾನ ನೀಡಿರುವುದು ಸಂತಸ ತಂದಿದೆ. ಉತ್ತಮ ಕಾರ್ಯನಿರ್ವಹಣೆಯಲ್ಲಿ ಯಶಸ್ವಿಯಾಗಲಿದ್ದಾರೆ’ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಗುಲಾಬಿ ಸುರೇಶ್ ಹೇಳಿದರು.
ನಗರಸಭೆ ಮುಂಭಾಗದಲ್ಲಿ ಸಚಿವರಾಗಿ ಶಾಸಕ ಬಿ.ಸಿ.ನಾಗೇಶ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಬಿಜೆಪಿಯಿಂದ ನಡೆದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.
ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ನೀಡುವ ಗೌರವ ಇದಾಗಿದೆ. ಹಲವು ದಶಕಗಳಿಂದ ಪಕ್ಷದ ಬಲವರ್ಧನೆ, ಸಂಘಟನೆಗೆ ದುಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉತ್ತಮ ಕಾರ್ಯಗಳನ್ನು ನಿರ್ವಹಿಸುವ ಭರವಸೆಯಿದೆ ಎಂದರು.
ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದಿಂದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಟಿ.ವಿ ಮೂಲಕ ನೇರ ಪ್ರಸಾರದ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಜೈಕಾರ ಕೂಗಿ ಸಂಭ್ರಮ ಆಚರಿಸಿದರು.
ನಗರಸಭೆ ಉಪಾಧ್ಯಕ್ಷ ಸೊಪ್ಪು ಗಣೇಶ್, ಸದಸ್ಯ ಶ್ರೀನಿವಾಸ್, ಮುಖಂಡರಾದ ಸಿಂಗ್ರಿ ದತ್ತಪ್ರಸಾದ್, ಬಂಡಿಹಳ್ಳಿ ರಾಜು, ಈಚನೂರು ಗಿರೀಶ್, ತಿಮ್ಮೇಗೌಡ, ಸದಾಶಿವಯ್ಯ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.