ಶಿರಾ: ವಾಲ್ಮೀಕಿ ಜಯಂತಿ ಅಂಗವಾಗಿ ಸೋಮವಾರ ತಾಲ್ಲೂಕು ಆಡಳಿತ ಕರೆದಿದ್ದ ಪೂರ್ವಭಾವಿ ಸಭೆಯನ್ನು ಕರ್ನಾಟಕ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಹೆಚ್ಚಳದ ಕ್ರಿಯಾಸಮಿತಿಯ ಪದಾಧಿಕಾರಿಗಳು ಬಹಿಷ್ಕರಿಸಿ ತಹಶೀಲ್ದಾರ್ ಎಂ. ಮಮತ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕಳೆದ 229 ದಿನಗಳಿಂದ ಸಮುದಾಯದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡುವುದು ಸರಿಯಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಜೊತೆಗೆ ಶೋಷಿತ ಸಮಾಜಗಳನ್ನು ಕಡೆಗಣಿಸುತ್ತಿರುವುದು ಖಂಡನೀಯ ಎಂದರು.
ರಾಜ್ಯ ಸರ್ಕಾರ ಸ್ವಾಮೀಜಿ ಅವರ ಹೋರಾಟ ಗೌರವಿಸಬೇಕು. ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕು. ಕಾನೂನು ರೀತಿಯಲ್ಲಿ ನಮ್ಮ ಬೇಡಿಕೆ ಈಡೇರಿಸಿ ಸ್ವಾಮೀಜಿ ಅವರನ್ನು ಮಠಕ್ಕೆ ಕಳುಹಿಸಿ ಕೊಟ್ಟರೆ ಮಾತ್ರ ವಾಲ್ಮೀಕಿ ಜಯಂತಿಯನ್ನು ಸಡಗರದಿಂದ ಆಚರಣೆ ಮಾಡುತ್ತೇವೆ. ಇಲ್ಲದಿದ್ದರೆ ಮನೆಗಳಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ವಂದಿಸದೆ ವಾಲ್ಮೀಕಿ ಜಯಂತಿ ಆಚರಣೆಗೆ ಮುಂದಾದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.