ಮಧುಗಿರಿ: ಆನ್ಲೈನ್ ಶಿಕ್ಷಣದಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ ಹಾಗೂ ಖಾಸಗಿ ಶಾಲೆಗಳಿಂದ ಅತಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕು ಬಹುಜನ ಸಮಾಜ ಪಾರ್ಟಿಯ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಕೊರೊನಾ ತಂದಿಟ್ಟ ಸಂಕಷ್ಟದ ಸಮಯದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಆನ್ಲೈನ್ ಶಿಕ್ಷಣದ ಹೆಸರಿನಲ್ಲಿ ಪೋಷಕರಿಂದ ಹಣ ವಸೂಲಿ ಮಾಡುತ್ತಿವೆ. ರಾಜ್ಯದಲ್ಲಿ ಶೇ 40ರಷ್ಟು ವಿದ್ಯಾರ್ಥಿಗಳಿಗೆ ಮೊಬೈಲ್ ಕೊರತೆ ಇದೆ ಎಂದು ಸಂಘ - ಸಂಸ್ಥೆಗಳು ಮಾಹಿತಿ ನೀಡಿವೆ. ಬಡವರು ಹಾಗೂ ಕೂಲಿ ಕಾರ್ಮಿಕರ ಸಂಖ್ಯೆಯೇ ಹೆಚ್ಚಾಗಿದ್ದು, ಖಾಸಗಿ ಸಂಸ್ಥೆಗಳು ಹೆಚ್ಚು ಶುಲ್ಕವನ್ನು ವಸೂಲಿ ಮಾಡಬಾರದು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲ ಶಾಲಾ- ಕಾಲೇಜುಗಳ ಶುಲ್ಕಗಳನ್ನು ಮನ್ನಾ ಮಾಡಬೇಕು. ನಿಯಮ ಮೀರಿ ಹಣ ವಸೂಲಿ ಮಾಡಿದರೆ ಅಂತಹ ಶಿಕ್ಷಣ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬಹುಜನ ಸಮಾಜ ಪಾರ್ಟಿ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಸ್.ಗೋಪಾಲ್, ಪ್ರಧಾನ ಕಾರ್ಯದರ್ಶಿ ಆರ್.ಅಂಜನ್, ಮುಖಂಡರಾದ ಎಸ್.ಎ.ಅಶ್ವತ್ಥಪ್ಪ, ಸೂರ್ಯ, ದೊಡ್ಡಯ್ಯ, ನಾಗರಾಜು, ಚೇತನ್, ಮಹೇಶ, ನರಸಿಂಹಮೂರ್ತಿ, ಮಹೇಂದ್ರ ಬಾಬು ಹಾಜರಿದ್ದರು.