ತುಮಕೂರು: ಮೌಢ್ಯ ನಿಂತ ನೀರಾದರೆ ವಿಜ್ಞಾನ ಹರಿಯುವ ನದಿಯಂತೆ. ಮಾಟ, ಮಂತ್ರ, ಮೂಢನಂಬಿಕೆ, ಕಂದಾಚಾರಗಳಿಂದ ತಮ್ಮ ಜೀವನ ರಕ್ಷಿಸಿಕೊಳ್ಳಬೇಕು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಹುಲಿಕಲ್ ನಟರಾಜ್ ಸಲಹೆ ಮಾಡಿದರು.
ತಾಲ್ಲೂಕಿನ ನಾಗವಲ್ಲಿಯ ಕೆಪಿಎಸ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ವೈಜ್ಞಾನಿಕ ತಳಹದಿಯ ಮೇಲೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಇಂದಿನ ಸಮಾಜದಲ್ಲಿ ಬಡತನಕ್ಕಿಂತ ಮನುಷ್ಯತ್ವದ ಕೊರತೆ ಬಹಳಷ್ಟಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ಮೌಢ್ಯದಿಂದ ಮುಗ್ಧ ಜನರು ಯಾವೆಲ್ಲ ರೀತಿ ವಂಚನೆಗೆ ಒಳಗಾಗುತ್ತಾರೆ ಎಂಬುದನ್ನು ಹತ್ತಾರು ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ತಿಳಿಸಿದರು. ಮಕ್ಕಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಉಪಪ್ರಾಂಶುಪಾಲ ಜೆ.ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರಯ್ಯ, ಶಿಕ್ಷಕರಾದ ಕೇಶವಮೂರ್ತಿ, ವೀಣಾ, ವಿಜಯಲಕ್ಷ್ಮಿ, ಅನಿಲ್ಕುಮಾರ್ ಇತರರು ಹಾಜರಿದ್ದರು.