ತುಮಕೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಚಾಲನೆ ನೀಡಿದ್ದರೂ ಸೋಮವಾರ ತಾಂತ್ರಿಕ ಸಮಸ್ಯೆಗಳಿಂದ ನೋಂದಣಿ ಸಾಧ್ಯವಾಗಿಲ್ಲ. ಖರೀದಿ ಕೇಂದ್ರಕ್ಕೆ ಬಂದಿದ್ದ ರೈತರು ಬರಿಗೈಲಿ ವಾಪಸಾದರು.
ರಾಗಿ ಖರೀದಿಸುವುದನ್ನು ಸರ್ಕಾರ ತಿಂಗಳ ಹಿಂದೆ ಸ್ಥಗಿತಗೊಳಿಸಿತ್ತು. ಈಗ ಮತ್ತೆ ಆರಂಭಿಸಿದ್ದು, ನೋಂದಣಿ ಮಾಡಿಸಲು ಸಾಧ್ಯವಾಗದೆ ರೈತರು ಹಿಂದಿರುಗಿದರು. ಕೇಂದ್ರಕ್ಕೆ ಬಂದವರಿಗೆ ಕೆಲವೆಡೆ ಟೋಕನ್ ಕೊಟ್ಟು ಕಳುಹಿಸಲಾಗಿದೆ.
ತುಮಕೂರು, ಗುಬ್ಬಿ, ಕುಣಿಗಲ್, ತುರುವೇಕೆರೆ, ಹುಳಿಯಾರು, ತಿಪಟೂರು, ಚಿಕ್ಕನಾಯಕನಹಳ್ಳಿ, ಶಿರಾ ಹಾಗೂ ಮಧುಗಿರಿ ಎಪಿಎಂಸಿ ಪ್ರಾಂಗಣಗಳಲ್ಲಿ ನೋಂದಣಿ ಮತ್ತು ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.
ರೈತರು ಕೃಷಿ ಇಲಾಖೆಯಿಂದ ಪಡೆದುಕೊಂಡಿರುವ ‘ಫ್ರೂಟ್ ಐಡಿ’ಯೊಂದಿಗೆ ತಾಲ್ಲೂಕಿನ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಸಿಕೊಂಡು ರಾಗಿ ಮಾರಾಟ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಕ್ವಿಂಟಲ್ಗೆ ₹3,377 ದರದಲ್ಲಿ ಖರೀದಿಸಲಾಗುತ್ತದೆ. ಉತ್ಪಾದನೆಗೆ ಅನುಗುಣವಾಗಿ ಪ್ರತಿ ರೈತರಿಂದ 10 ಕ್ವಿಂಟಲ್ನಂತೆ ಗರಿಷ್ಠ 20 ಕ್ವಿಂಟಲ್ ಖರೀದಿಸಲಾಗುತ್ತದೆ. ರಾಜ್ಯದಲ್ಲಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಇಷ್ಟು ಪ್ರಮಾಣದ ಖರೀದಿಗೆ ನೋಂದಣಿಯಾದ ಕೂಡಲೇ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ನಂತರ ಖರೀದಿಸುವುದಿಲ್ಲ ಎಂದು ಹೇಳಿದ್ದಾರೆ.