ತುಮಕೂರು: ಜೆಡಿಎಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸಿ.ಚನ್ನಿಗಪ್ಪ (73) ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಇವರಿಗೆ ಪತ್ನಿ, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಸೇರಿದಂತೆ ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ ಚನ್ನಿಗಪ್ಪ, 1994ರಲ್ಲಿ ಜನತಾದಳ, 1999 ಮತ್ತು 2004ರಲ್ಲಿ ಜೆಡಿಎಸ್ನಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು. ಧರ್ಮಸಿಂಗ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು.
ಕೊರಟಗೆರೆ ಮೀಸಲು ಕ್ಷೇತ್ರವಾದ ನಂತರ ಮಧುಗಿರಿ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಪ್ರಯತ್ನಿದರು. ಈ ಕ್ಷೇತ್ರಗಳಲ್ಲಿ ಸೋಲು ಅನುಭವಿಸಿದರು. ದೇವೇಗೌಡರ ಕುಟುಂಬಕ್ಕೆ ಅತ್ಯಾಪ್ತರಾಗಿದ್ದ ಅವರು ಕೆಲ ಕಾಲ ಬಿಜೆಪಿಯಲ್ಲಿ ಇದ್ದರು.
ಚನ್ನಿಗಪ್ಪ ಅವರ ಸ್ವಗ್ರಾಮ ನೆಲಮಂಗಲ ತಾಲ್ಲೂಕಿನ ಭೈರನಾಯಕನಹಳ್ಳಿಯಲ್ಲಿ ಶನಿವಾರ (ಫೆ.22) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.