ತುಮಕೂರು: ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಹೆಗ್ಗೆರೆಯಲ್ಲಿ ಮಾರ್ಚ್ 25ರಂದು ನಡೆದ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಶ್ರೀನಿವಾಸ್, ‘ವಿ.ಸೋಮಣ್ಣ ಬೆಂಗಳೂರಿನ ಕೊಚ್ಚೆ ನೀರು, ತುಮಕೂರಿನ ಜನ ಸ್ವಾಭಿಮಾನಿಗಳು, ಪ್ರಜ್ಞಾವಂತರು. ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಬೇಡಿ’ ಎಂದು ಹೇಳಿದ್ದರು.
ಈ ಸಭೆಯಲ್ಲಿ ಹಾಜರಿದ್ದ ಚುನಾವಣೆಯ ಎಫ್ಎಸ್ಟಿ ತಂಡದ ಕೆ.ಶಿವಪ್ಪ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
‘ಶ್ರೀನಿವಾಸ್ ಭಾಷಣದಲ್ಲಿ ಬಳಸಿದ ಪದ ಬಳಕೆಯು ಚುನಾವಣಾ ಆಯೋಗದ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಅವರು ದೂರಿನಲ್ಲಿ ತಿಳಿಸಿದ್ದರು.
ಈ ಸಂಬಂಧ ದೂರು ದಾಖಲಿಸಿಕೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್ ಆದೇಶದ ಮೇಲೆಗೆ ದೂರು ದಾಖಲಿಸಿಕೊಳ್ಳಲಾಗಿದೆ.