ತುಮಕೂರು: ಮಕ್ಕಳಿಗೆ ಬಾಲ್ಯ ಎನ್ನುವುದು ಜೀವನದ ಮುಖ್ಯಘಟ್ಟವಾಗಿದ್ದರಿಂದ ಅದನ್ನು ಉತ್ತಮ ರೀತಿಯಲ್ಲಿ ಅನುಭವಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ಬಾಲಕರ ಬಾಲಮಂದಿರ, ಸರ್ಕಾರಿ ಬಾಲಕಿಯರ ಬಾಲಮಂದಿರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ’ಮಕ್ಕಳ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಮುಗ್ಧತೆಯನ್ನು ಕಳೆದುಕೊಳ್ಳದೇ ಬಾಲ್ಯದ ರುಚಿಯನ್ನು ಸವಿಯಬೇಕು. ಹಾಗೇ ಜೀವನದಲ್ಲಿ ಶಿಕ್ಷಣದ ಜೊತೆಗೆ ನೈತಿಕ ವಿಷಯಗಳನ್ನು ತಿಳಿದುಕೊಳ್ಳಬೇಕು. ಪರಿಸರ ರಕ್ಷಣೆ, ಮಾಲಿನ್ಯದ ಬಗ್ಗೆ ಚಿಕ್ಕಂದಿನಿಂದಲೇ ಜಾಗೃತಿ ಮೂಡಿಸಿ ನೈರ್ಮಲ್ಯದ ವಾತಾವರಣದಲ್ಲಿ ಬದುಕಲು ಶ್ರಮಿಸಬೇಕಾಗಿದೆ ಎಂದು ಹೇಳಿದರು.
ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲಾ ಒಂದು ರೀತಿಯ ಸುಪ್ತ ಪ್ರತಿಭೆಗಳು ಅಡಗಿರುತ್ತವೆ. ಹಾಗಾಗಿ ಅದನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಕೆಲಸ ಮಾಡಬೇಕಿದೆ. ಹಾಗೇ ಆದರ್ಶ ವ್ಯಕ್ತಿಗಳ ಮಾರ್ಗದರ್ಶನದಿಂದ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಸಿಇಓ ಅನೀಸ್ ಕಣ್ಮಣಿ ಜಾಯ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ನಂದಕುಮಾರ್, ಸದಸ್ಯರಾದ ಲಕ್ಷ್ಮೀ, ರಾಘವೇಂದ್ರ ಇದ್ದರು.