ತುಮಕೂರು: ಹಸಿವಿನಿಂದ ಬಳಲುತ್ತಿರುವ ಅಸಂಘಟಿತ ವಲಯದ ಕಾರ್ಮಿಕರು ಮತ್ತು ಬಡವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಬೇಕು. ಇಲ್ಲದಿದ್ದರೆ, ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಲಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಅವರು ಮಾತನಾಡಿದರು.
ದೇಶದಲ್ಲಿ 130 ಕೋಟಿ ಜನಸಂಖ್ಯೆ ಇದೆ. ಆದ್ದರಿಂದ ವೈದ್ಯಕೀಯ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸೋಂಕು ವ್ಯಾಪಕವಾಗಿ ಹರಡಿರುವ ಪ್ರದೇಶವೂ ಸೇರಿದಂತೆ ಎಲ್ಲರಿಗೂ ಉಚಿತವಾಗಿ ಪರೀಕ್ಷೆ ಮಾಡಬೇಕು ಎಂದು ಒತ್ತಾಯಿಸಿದರು.
ಔಷಧಿ ತಯಾರಿಸುವುದರಲ್ಲಿ ಸರ್ಕಾರಿ ಕಂಪನಿಗಳೂ ಸಾಧನೆ ಮಾಡಿವೆ. ಆದರೆ, ಔಷಧಿಗಳ ತಯಾರಿಕೆಯನ್ನು ಹೊಸದಾಗಿ ಆರಂಭವಾಗಿರುವ ಖಾಸಗಿ ಕಂಪನಿಗೆ ವಹಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೂ ಸರ್ಕಾರ ಗಂಭೀರತೆ ಅರ್ಥಮಾಡಿಕೊಂಡಿಲ್ಲ ಎಂದು ಆರೋಪಿಸಿದರು.
ಸಿಐಟಿಯು ಮುಖಂಡ ಕೆ.ಎನ್.ಉಮೇಶ್, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಣ ಪಡೆದು ಬಿಜೆಪಿ ಶಾಸಕರು ಆಹಾರ ಸಾಮಗ್ರಿಗಳನ್ನು ವಿತರಿಸುತ್ತಿದಾರೆ. ಇದನ್ನು ಸಂಘಟನೆ ಖಂಡಿಸುತ್ತದೆ ಎಂದರು.
ವಕೀಲ ಪ್ರತಾಪ್ ಸಿಂಹ ಮಾತನಾಡಿದರು. ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಕಟ್ಟಡ ಕಾರ್ಮಿಕ ಸಂಘಧ ಬಿ.ಉಮೇಶ್, ಸಿಐಟಿಯು ಎನ್.ಕೆ.ಸುಬ್ರಹ್ಮಣ್ಯ, ಖಜಾಂಚಿ ಎ.ಲೋಕೇಶ್ ಇದ್ದರು.