ತುಮಕೂರು: ಜಿಲ್ಲಾ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಏಳೆಂಟು ವರ್ಷಗಳಿಂದ ಮುಂಬಡ್ತಿ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ನೌಕರರಿಗೆ ಏಳೆಂಟು ವರ್ಷಗಳಿಂದ ಮುಂಬಡ್ತಿ ನೀಡದ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಮುಖಂಡರು ಮನವಿ ಸಲ್ಲಿಸಿದ್ದರು. ಈ ವೇಳೆ ಇಲಾಖಾ ವಿಚಾರಣೆ ಇತ್ಯರ್ಥವಾಗದೆ ಬಾಕಿ ಇರುವ ಕಾರಣ ಅಲ್ಲಿನ ನೌಕರರು ಪದೋನ್ನತಿಯಿಂದ ವಂಚಿತರಾಗಿರುವುದಾಗಿ ಸರ್ಕಾರದ ಗಮನ ಸೆಳೆದಿದ್ದರು.
ಶೀಘ್ರವೇ ಇಲಾಖಾ ವಿಚಾರಣೆ ಇತ್ಯರ್ಥಪಡಿಸಿ ಮುಂಬಡ್ತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿತ್ತು. ಆದರೂ ಈ ಬಗ್ಗೆ ವಿಳಂಬ ಧೋರಣೆ ತಾಳಲಾಗಿತ್ತು.
ಆದ್ದರಿಂದ ಮುಖ್ಯ ಕಾರ್ಯದರ್ಶಿ ನಿರ್ದೇಶನದಂತೆ ಬಾಕಿ ಇರುವ ಇಲಾಖಾ ವಿಚಾರಣೆಗಳನ್ನು ಇತ್ಯರ್ಥ ಪಡಿಸಲು ಹಾಗೂ ಮುಂಬಡ್ತಿ ನೀಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅಲ್ಲದೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.
‘ಪ್ರಜಾವಾಣಿ’ಯಲ್ಲಿ ವರದಿ: ಜಿಲ್ಲಾ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಏಳೆಂಟು ವರ್ಷಗಳಿಂದ ಮುಂಬಡ್ತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.