ತುಮಕೂರು: ಶಿಕ್ಷಕ ಸಮಾಜದ ಪರಿವರ್ತಕ. ಭಗವಂತನ ದಾರಿ ತೋರುವ ಸನ್ಮಾರ್ಗಿ. ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅಂಧಕಾರ ಹೋಗಲಾಡಿಸಿ ಬೆಳಕು ತೋರಿಸುವ ಸಂತ ಎಂದು ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲ ಜಿ.ಟಿ.ಜಗದೀಶ್ ಹೇಳಿದರು.
ನಗರದ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಇದರಿಂದ ಭವಿಷ್ಯ ಉಜ್ವಲವಾಗುತ್ತದೆ. ಜೀವನದಲ್ಲಿ ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ತಲುಪಲು ಶ್ರಮವಹಿಸಬೇಕು ಎಂದರು.
ಶಿಕ್ಷಕರ ಪಾತ್ರ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಹೇಗೆ ಪ್ರಮುಖ ಎನ್ನುವ ಕುರಿತು ಸಾಧಕರ ವಿಚಾರಗಳನ್ನು ಪ್ರಸ್ತಾಪಿಸಿ ಮಾತನಾಡಿದರು.
ನಗರದ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಪ್ರಾಂಶುಪಾಲ ಬಿ.ವಿ.ಬಸವರಾಜು ಅಧ್ಯಕ್ಷತೆವಹಿಸಿದ್ದರು. ಕಾಲೇಜಿನ ಸಿಬ್ಬಂದಿ, ಉಪನ್ಯಾಸಕರು ಇದ್ದರು.