ಕೊರಟಗೆರೆ: ಲಾಕ್ಡೌನ್ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ತರಕಾರಿ ಮಾರಾಟ ಮಾಡಲು ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿಯಿಂದ ಅವಕಾಶ ಕಲ್ಪಿಸಲಾಗಿದೆ.
ದಿನ ಬಳಕೆ ವಸ್ತುಗಳನ್ನು ಕೊಳ್ಳಲು ಬೆಳಿಗ್ಗೆ 7ರಿಂದ 10ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜೂನಿಯರ್ ಕಾಲೇಜು ಆವರಣದಲ್ಲಿ ನಿತ್ಯ ತರಕಾರಿ ಮಾರಾಟಕ್ಕೆ ಅವಕಾಶ ಇದೆ. ಜನರು ಗುಂಪಾಗಿ ನಿಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಂಡು ಖರೀದಿಸಬೇಕು ಎಂದು ಸಿಪಿಐ ಎಫ್.ಕೆ. ನದಾಫ್ ತಿಳಿಸಿದರು.
ಮನೆ ಬಿಟ್ಟು ಹೊರಗಡೆ ಓಡಾಡು ವಂತಿಲ್ಲ. ಒಂದು ವೇಳೆ ಓಡಾಡಿದೆ ಅಂತಹವರ ದ್ವಿಚಕ್ರ ವಾಹನ, ನಾಲ್ಕು ಚಕ್ರದ ವಾಹನಗಳನ್ನು ಕಟ್ಟುನಿಟ್ಟಾಗಿ ಜಪ್ತಿ ಮಾಡಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ ನೇತೃತ್ವದಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ಹಾಗೂ ಪೊಲೀಸ್ ಸಿಬ್ಬಂದಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ವಾಹನ ಪರಿಶೀಲಿಸಿ ಕೆಲವು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
₹10 ಲಕ್ಷ ಮೌಲ್ಯದ ಸ್ಯಾನಿಟೈಸರ್ ಮಾಸ್ಕ್
ಕೊರಟಗೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಶಾಸಕ ಡಾ.ಜಿ.ಪರಮೇಶ್ವರ ಭೇಟಿ ನೀಡಿ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.
ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ ಇಲಾಖೆ, ಪತ್ರಕರ್ತರು ಸೇರಿದಂತೆ ಕೊರೊನಾ ತುರ್ತು ಸೇವೆಯಲ್ಲಿ ತೊಡಗಿರುವವರಿಗೆ ನೀಡುವಂತೆ ವಯಕ್ತಿಕವಾಗಿ ₹10 ಲಕ್ಷ ಮೌಲ್ಯದ ಮಾಸ್ಕ್, ಸ್ಯಾನಿಟೈಸರ್ ಅನ್ನು ತಹಶೀಲ್ದಾರ್ ಅವರಿಗೆ ನೀಡಿದರು.