ತುಮಕೂರು: ತಾಲ್ಲೂಕಿನ ಗೂಳೂರು ಹೋಬಳಿಯ ಹುಳ್ಳೇನಹಳ್ಳಿ ಗ್ರಾಮದಲ್ಲಿ ಮಾಜಿ ಶಾಸಕ ಬಿ.ಸುರೇಶ್ಗೌಡ ಅವರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಕುರುಬ ಸಮಾಜವನ್ನು ಅವಹೇಳನಕಾರಿಯಾಗಿ ನಿಂದಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮುದಾಯದ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.
ಮಾಜಿ ಶಾಸಕರು ನಿಂದಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಮ್ಮ ಸಮಾಜದ ಬಗ್ಗೆ ಮಾಜಿ ಶಾಸಕರು ಕೆಟ್ಟ ಪದ ಬಳಿಸಿರುವುದು ನಮಗೆಲ್ಲ ನೋವು ತಂದಿದೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಮತ್ತೊಮ್ಮೆ ಕುರುಬ ಸಮುದಾಯದ ಬಗ್ಗೆ ಮಾತನಾಡದಂತೆ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದರು.
ಮಾಜಿ ಶಸಕರು ಕೂಡಲೇ ಕುರುಬ ಸಮುದಾಯದ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಕೆಂಪಯ್ಯ, ಎಂ.ಶಂಕರ್, ಲಿಂಗರಾಜು, ಡಿ.ನಟರಾಜು, ಚಿಕ್ಕಣ್ಣ, ಕಾಂತರಾಜು ಸೇರಿದಂತೆ ಹಲವು ದೂರಿಗೆ ಸಹಿ ಹಾಕಿದ್ದಾರೆ.