ತುಮಕೂರು: ಎಪಿಎಂಸಿ, ಭೂ ಸುಧಾರಣೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ನಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ‘ರೈತ ವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಭ್ರಷ್ಟ ಬಿಜೆಪಿ ಸರ್ಕಾರ ಅಧಿಕಾರದಿಂದ ತೊಲಗಬೇಕು’ ಎಂದು ಘೋಷಣೆ ಕೂಗಿದರು.
ಕೊರೊನಾ ನಿಯಂತ್ರಣದ ಹೆಸರಿನಲ್ಲಿ ವೆಂಟಿಲೇಟರ್, ಮಾಸ್ಕ್, ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ರಾಷ್ಟ್ರದ ಬೇರೆ ಬೇರೆ ರಾಜ್ಯಗಳು ಕನಿಷ್ಠ ದರದಲ್ಲಿ ಉಪಕರಣಗಳನ್ನು ಖರೀದಿಸಿದರೆ, ಕರ್ನಾಟಕದಲ್ಲಿ ಮಾತ್ರ ದುಪ್ಪಟ್ಟು, ಮೂರು ಪಟ್ಟು ಬೆಲೆಗೆ ಖರೀದಿಸಲಾಗಿದೆ. ಲೆಕ್ಕ ಕೊಡಿ ಎಂದು ವಿರೋಧ ಪಕ್ಷದ ನಾಯಕರು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಉಳ್ಳವನೇ ಭೂಮಿಯ ಒಡೆಯ ಎನ್ನುವಂತೆ ಮಾಡಿದೆ. ರೈತರು ದಲ್ಲಾಳಿಗಳ ಕಪಿಮುಷ್ಟಿಗೆ ಸಿಲುಕಿದ್ದಾರೆ. ಇಂತಹ ದುಷ್ಟ ಸರ್ಕಾರ ಅಧಿಕಾರದಿಂದ ತೊಲಗದ ಹೊರತು ರೈತರು, ಕಾರ್ಮಿಕರು, ಕೃಷಿ ಕಾರ್ಮಿಕರಿಗೆ ಉಳಿಗಾಲ ಇಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಶಾಸಕ ಡಾ.ರಫೀಕ್ ಅಹಮದ್, ಆರ್.ನಾರಾಯಣ್, ಜಿ.ಪಂ ಸದಸ್ಯ ಕೆಂಚಮಾರಯ್ಯ, ಮುರಳೀಧರ ಹಾಲಪ್ಪ, ಮೇಯರ್ ಫರೀದಾ ಬೇಗಂ, ಮಾಜಿ ಮೇಯರ್ ರೂಪಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್, ಪಾಲಿಕೆಯ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರತಿಭಟನೆಗೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.