ತಿಪಟೂರು: ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ನಗರದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸ್ಥಾಪನೆ ಮಾಡುತ್ತಿದ್ದು, ಕನಕದಾಸರ ಹೆಸರಿಸಲಾಗಿದೆ. ವಿದ್ಯಾರ್ಥಿಗಳಿಗೆ ಅವರ ತತ್ವ, ಆದರ್ಶಗಳು ಪ್ರೇರಣೆಯಾಗಬೇಕಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ನಗರದ ಸಿದ್ದರಾಮೇಶ್ವರ ಪಾಲಿಟೆಕ್ನಿಕ್ ಎದುರು ಸೋಮವಾರ ತಾಲ್ಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ₹ 3.26 ಕೋಟಿ ವೆಚ್ಚದಡಿ ಕನಕದಾಸ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ತುಮಕೂರಿನ ನಂತರ ತಿಪಟೂರು ನಗರ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರದಲ್ಲಿನ ಪ್ರಥಮದರ್ಜೆ ಕಾಲೇಜಿನ ಅಭಿವೃದ್ಧಿಯಿಂದ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದರು.
ಪಾಲಿಟೆಕ್ನಿಕ್, ಐಟಿಐ, ಕಲ್ಪತರು ಎಂಜಿನಿಯರಿಂಗ್ ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಭ್ಯಾಸ ಮಾಡಲು ಮೂಲ ಸೌಕರ್ಯದ ಅಗತ್ಯವಿದೆ. ಈ ನಿಟ್ಟಿನಲ್ಲಿ ಮತ್ತೊಂದು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.
ಈಗಾಗಲೇ ಸುಸಜ್ಜಿತ ಬಾಲಕಿಯರ ವಿದ್ಯಾರ್ಥಿ ನಿಲಯ ಕಾಮಗಾರಿ ಚಾಲನೆಯಲ್ಲಿದೆ. ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರತ್ಯೇಕ ವಿದ್ಯಾರ್ಥಿ ನಿಲಯಕ್ಕೆ ಮನವಿ ಮಾಡಲಾಗಿದೆ. ಬಡಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಸೌಕರ್ಯ ಒದಗಿಸಲು ಬದ್ಧ. ಈ ವಿದ್ಯಾರ್ಥಿ ನಿಲಯದಲ್ಲಿ ಒಟ್ಟು 48 ಕೊಠಡಿಗಳು ನಿರ್ಮಾಣವಾಗಲಿವೆ ಎಂದರು.
ನಗರಸಭೆ ಅಧ್ಯಕ್ಷ ಪಿ.ಜೆ. ರಾಮಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಿರಣ್, ಕೆ.ಎಚ್.ಬಿ. ಸಹಾಯಕ ಎಂಜಿನಿಯರ್ ಸಾಹುಕಾರ್ ಹಾಲೇಶಪ್ಪ, ಎಂಜಿನಿಯರ್ ಜ್ಯೋತಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ, ವಿಸ್ತರಣಾಧಿಕಾರಿ ಟಿ.ಎಸ್. ಗಂಗಾಧರ್ ಇದ್ದರು.