ಬೆಂಗಳೂರು:ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಬೇಕೆಂಬ ಆಗ್ರಹಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಕ್ತ ರೀತಿಯಿಂದ ಸ್ಪಂದಿಸಿಲ್ಲ, ಹೀಗಾಗಿ ಹೋರಾಟ ಮುಂದುವರಿಯಲಿದೆ ಎಂದು ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದ್ದಾರೆ.
ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವುದಕ್ಕೆ ಅಡ್ಡಿ ಉಂಟುಮಾಡಿದ ಸರ್ಕಾರದ ನಡೆಯನ್ನು ವಿರೋಧಿಸಿ ಮಂಗಳವಾರ ಅವರು ಇಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಮಾಡಿ, ಮನವಿ ಸಲ್ಲಿಸಿದರೂ, ಕೇವಲ ಒಂದೆರಡು ಮಾತನ್ನಷ್ಟೇ ಆಡಿ ಹೊರಟು ಹೋದರು. ‘ಪೊಲೀಸ್ ಬಲ ಬಳಸಿ ಪಾದಯಾತ್ರೆಗೆ ತಡೆ ಒಡ್ಡಿದ್ದಾರೆ. ನಮ್ಮ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಿಲ್ಲ, ಹೀಗಾಗಿ ಹೊರಾಟ ಮುಂದುವರಿಸಲಿದ್ದೇವೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಈ ಮಧ್ಯೆ,ಪಾದಯಾತ್ರೆ ಹೊರಟಿದ್ದ ಸಾವಿರಾರು ಮಂದಿಯನ್ನು ತಡೆಹಿಡಿದು, ಬಂಧಿಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.
ಸಿದ್ದರಾಮಯ್ಯ ಖಂಡನೆ
ಅಂಗನವಾಡಿ ಕಾರ್ಯಕರ್ತೆಯರನ್ನು ಹತ್ತಿಕ್ಕಲು ಪೊಲೀಸರು ಬಂಧನ, ಬಲಪ್ರಯೋಗದಂತಹ ಅತಿರೇಕದ ಕ್ರಮಕ್ಕೆ ಮುಂದಾಗಿರುವುದು ಖಂಡನೀಯ, ಮುಖ್ಯಮಂತ್ರಿ ಅವರು ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.