ಶಿರಾ: ಕೊರೊನಾ ಸೊಂಕಿತರಿಗೆ ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಕೇರ್ ಸೆಂಟರ್ ಪ್ರಾರಂಭಿಸುವುದಾಗಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಾರ್ವಜನಿಕರು, ಸ್ವಯಂಸೇವಕರು ಹಾಗೂ ಕಾರ್ಯಕರ್ತರ ಜತೆ ನಡೆದ ಸಭೆಯಲ್ಲಿ ಮಾತನಾಡಿದರು.
ಶಿರಾ ತಾಲ್ಲೂಕಿನಲ್ಲಿ ಕೊರೊನಾ ಸೋಂಕು ನಿವಾರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ನಿರ್ಮೂಲನೆ ಕೇವಲ ಒಬ್ಬರು ಅಥವಾ ಸರ್ಕಾರದಿಂದ ಸಾಧ್ಯವಿಲ್ಲ. ಪ್ರತಿಯೊಬ್ಬರು ಸಹಕಾರ ನೀಡಿದರೆ ಮಾತ್ರ ಸಾಧ್ಯ. ಬರಗೂರು, ತಾವರೆಕೆರೆ, ದ್ವಾರನಕುಂಟೆ ಸೇರಿದಂತೆ ಅಗತ್ಯವಿರುವ ಕಡೆ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದರು.
ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಕಾಮಗಾರಿ ಪ್ರಗತಿಯಲ್ಲಿದೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಇಲ್ಲ. ಆಸ್ಪತ್ರೆಯಲ್ಲಿ ಆಮ್ಲಜನಕ ಸೌಲಭ್ಯವಿರುವ 82 ಹಾಸಿಗೆಗಳಿದ್ದು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸ್ವಯಂ ಸೇವಕರ ತಂಡ: ಕೊರೊನಾ ಎರಡನೇ ಅಲೆ ಪ್ರಾರಂಭವಾದ ಹಿನ್ನೆಲೆಯಲ್ಲಿ 140 ಮಂದಿ ಸ್ವಯಂ ಸೇವಕರ ತಂಡ ರಾತ್ರಿ ಹಗಲು ಕೆಲಸ ಮಾಡುತ್ತಿದೆ. ಕೊರೊನಾ ಸೊಂಕಿತರನ್ನು ಆಸ್ಪತ್ರೆಗೆ ಕರೆ ತರುವುದು, ಚಿಕಿತ್ಸೆ ಕೊಡಿಸುವುದು, ಆಹಾರ ವಿತರಣೆ, ಅಗತ್ಯವಿರುವವರಿಗೆ ಔಷಧಿ ತಲುಪಿಸಲಾಗುತ್ತಿದೆ ಎಂದರು.