ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ, ರೈತವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ ಎಂದು ಆರೋಪಿಸಿ ಸಿಪಿಐ ಕಾರ್ಯಕರ್ತರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ಲಾಕ್ಡೌನ್ನಿಂದ ಕೂಲಿ ಕಾರ್ಮಿಕರು, ದಿನಗೂಲಿ ಕೆಲಸಗಾರರು ಸಾಕಷ್ಟು ಸಂಕಷ್ಟ ಎದುರಿಸುವಂತಾಗಿದೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರ ಹಿತಕಾಯಲು ಮುಂದಾಗಿಲ್ಲ ಎಂದು ದೂರಿದರು.
ರಾಷ್ಟ್ರ ಬಿಕ್ಕಟ್ಟು ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಕ್ಷಣಾ ಕ್ಷೇತ್ರ, ಕಲ್ಲಿದ್ದಲು, ಗಣಿಗಾರಿಕೆ ಖಾಸಗೀಕರಣಕ್ಕೆ ಮುಂದಾಗಿರುವುದು ದೇಶದ ಭದ್ರತೆಗೆ ಧಕ್ಕೆ ತರುತ್ತದೆ. ಸ್ವದೇಶಿ ಮಂತ್ರ ಜಪಿಸುತ್ತಲೇ ವಿದೇಶಿ ಬಂಡವಾಳಗಾರರಿಗೆ ಮಣೆ ಹಾಕಿದೆ. ರೈತರು, ಬಡವರು, ಕೂಲಿ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಬುಧವಾರ ಸಿಪಿಐ ರಾಷ್ಟ್ರವ್ಯಾಪ್ತಿ ಮುಷ್ಕರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿ ಅವರ ಮೂಲಕ ಪ್ರಧಾನಿ ಅವರಿಗೆ ಸಲ್ಲಿಸಲಾಯಿತು.
ಸಿಪಿಐ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಾಂತರಾಜು, ಜಿಲ್ಲಾ ಮಂಡಳಿ ಸದಸ್ಯ ಸತ್ಯನಾರಾಯಣ, ನಾಗಣ್ಣ, ಎಸ್.ಎನ್.ಪಾಳ್ಯ ರಂಗನಾಥ್, ಅಜ್ಜಗೊಂಡನಹಳ್ಳಿ ಮಂಜುನಾಥ್, ಪಿಟ್ವೆಲ್ ರಾಜಶೇಖರ್ ಇದ್ದರು.