ತುಮಕೂರು: ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿ, ತಾಯಿ, ಅವಳಿ ಶಿಶುಗಳ ಸಾವಿಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಪಿಯುಸಿಎಲ್, ಸ್ಲಂ ಜನಾಂದೋಲನ– ಕರ್ನಾಟಕ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಮೃತ ಮಹಿಳೆ ವಾಸವಿದ್ದ ನಗರದ ಭಾರತಿ ನಗರಕ್ಕೆ ಶುಕ್ರವಾರ ವಿವಿಧ ಸಂಘಟನೆಗಳ ಮುಖಂಡರು ಭೇಟಿ ನೀಡಿ, ಸ್ಥಳೀಯರ ಜತೆ ಮಾತುಕತೆ ನಡೆಸಿದರು.
ಪಿಯುಸಿಎಲ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ದೊರೈರಾಜ್, ‘ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ದಾಖಲೆಗಳು ಇಲ್ಲದಿದ್ದರೂ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ಒದಗಿಸುವುದು ಜಿಲ್ಲಾ ಆಸ್ಪತ್ರೆಯ ಕರ್ತವ್ಯ. ಆದ್ದರಿಂದ ಸರ್ಕಾರ ಮೂರು ಜೀವಗಳ ಹಾನಿಗೆ ಜವಾಬ್ದಾರಿ ಹೊರಬೇಕು’ ಎಂದರು.
ಸ್ಲಂ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ, ‘ಮೃತ ಮಹಿಳೆಯು ಪರಿಶಿಷ್ಟ ಜಾತಿಗೆ ಸೇರಿದ್ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಸತ್ಯಮರೆಮಾಚಲು ಕಾಣದ ಕೈಗಳು ಪ್ರಯತ್ನಿಸುತ್ತಿದ್ದು, ಪೊಲೀಸರು ಅದಕ್ಕೆ ಆಸ್ಪದ ನೀಡಬಾರದು. ನೈಜ ವರದಿಯನ್ನು ಉನ್ನತ ಮಟ್ಟದ ತನಿಖಾ ಸಮಿತಿಯ ಮುಂದೆ ಮಂಡಿಸಬೇಕು’ ಎಂದು ಹೇಳಿದರು.
ಪ್ರಸ್ತುತ ಮಾಹಿತಿ ಪ್ರಕಾರ ನೀತಿ ಆಯೋಗದ ಸೂಚನೆ ಮೇರೆಗೆ ಜಿಲ್ಲಾ ಆಸ್ಪತ್ರೆಯನ್ನು ಖಾಸಗೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ತಕ್ಷಣ ಇದನ್ನು ಕೈ ಬಿಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.