ಮಧುಗಿರಿ: ರಾಜ್ಯ ಸರ್ಕಾರ ಹಾಲು ಉತ್ಪಾದಕರ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಮಧುಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಜಾನುವಾರು ಸಮೇತ ಪಟ್ಟಣದ ಡೂಂಲೈಟ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಹನುಮಂತೇಗೌಡ ಮಾತನಾಡಿ, ಸರ್ಕಾರ ಹಾಲು ಉತ್ಪಾದಕರ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಮಳೆ, ಬೆಳೆ ಇಲ್ಲದೆ ರೈತರು ಸಾಕಷ್ಟು ಸಮಸ್ಯೆಯಲ್ಲಿದ್ದಾರೆ. ಇಂತಹ ಸಮಯದಲ್ಲಿ ರೈತರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದರು.
ಮಧುಗಿರಿ, ಪಾವಗಡ, ಶಿರಾ ಮತ್ತು ಕೊರಟಗೆರೆ ತಾಲ್ಲೂಕುಗಳಲ್ಲಿ ಮಳೆ ಇಲ್ಲದೇ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆಯಾಗಿದ್ದು, ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂಜಲಗೆರೆ ಮೂರ್ತಿ, ಟಿ.ಎನ್. ರುದ್ರೇಶ್, ಶ್ರೀನಿವಾಸ್, ಸುರೇಶ್, ರವಿ, ರಾಮಾಂಜಿ, ಶಿವಶಂಕರ್ ಪಾಲ್ಗೊಂಡಿದ್ದರು.