ತುಮಕೂರು: ತಿಗಳ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ತಿಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ, ಕನಿಷ್ಠ
₹ 100 ಕೋಟಿ ಅನುದಾನ ನೀಡಬೇಕು ಎಂದು ಅಖಿಲ ಕರ್ನಾಟಕ ತಿಗಳರ ಕ್ಷೇಮಾಭಿವೃದ್ಧಿ ಸಂಘವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್, ‘ತಿಗಳ ಜನಾಂಗದ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಿತದ ಕಾರಣದಿಂದ ಪ್ರವರ್ಗ ‘2ಎ’ ಬದಲಾಗಿ ಪ್ರವರ್ಗ-1ರ ಅಡಿ ಮೀಸಲಾತಿ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಆಗಿದ್ದ ಅವಧಿಯಲ್ಲಿ ಸಮುದಾಯದ ಪ್ರಗತಿಗಾಗಿ ₹ 80 ಕೋಟಿ ಅನುದಾನ ನೀಡಿದ್ದರು. ಆದರೆ ನಂತರ ಬಂದ ಸರ್ಕಾರಗಳು ಸಮುದಾಯದ ಪ್ರಗತಿಗಾಗಿ ಯಾವುದೇ ಅನುದಾನ ನೀಡಲಿಲ್ಲ ಎಂದು ದೂರಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಸಂವಿಧಾನ ಬಾಹಿರವಾಗಿದೆ. ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇಲ್ಲದ ಸಮುದಾಯಕ್ಕೆ ನಿಗಮ ರಚಿಸಿರುವುದಕ್ಕೆ ಮಾನ್ಯತೆ ಇಲ್ಲ. ಜನರ ಕಣ್ಣೊರೆಸಲು ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ ಎಂದರು.
ತಿಗಳ ಮಹಾಸಭಾ ಅಧ್ಯಕ್ಷ ಎಚ್.ಸುಬ್ಬಣ್ಣ ಮಾತನಾಡಿ, ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇಲ್ಲದ ಜಾತಿಗೆ ಇಲಾಖೆಯಿಂದ ಅನುದಾನ ನೀಡಿರುವುದು ಸಂವಿಧಾನ ಬಾಹಿರ. ಸರ್ಕಾರ ಮೊದಲು ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲಿ. ನಂತರ ಅನುದಾನ ನೀಡಲಿ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.